ಆರ್ ಡಿ ಯಲಿಗಾರ ಅಮಾನತು……
ವಿಜಯಸಾಕ್ಷಿ ಸುದ್ದಿ, ಗದಗ
ಚುನಾವಣಾ ಕರ್ತವ್ಯ ಲೋಪದ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆ, ರೋಣ ಉಪ ವಿಭಾಗದ ಸಹಾಯಕ ಅಭಿಯಂತರರೊಬ್ಬರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಆರ್ ಡಿ ಯಲಿಗಾರ್ ಎಂಬುವವರೇ ಅಮಾನತುಗೊಂಡ ಸಹಾಯಕ ಅಭಿಯಂತರರು. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅವರು ತಾವು ನಿರ್ವಹಿಸಿದ ಬಗ್ಗೆ ಹಾಗೂ ತಮ್ಮ ವಾಹನದ ಬಗ್ಗೆ ಪ್ರತಿನಿತ್ಯ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಬೇಕಾಗಿತ್ತು.
ತಮ್ಮ ಕರ್ತವ್ಯ ನಿರ್ವಹಣೆ ಬಗ್ಗೆ ತಪ್ಪಾದ ಮಾಹಿತಿ ನೀಡಿದ್ದಲ್ಲದೆ ಅವರಿಗೆ ದೂರವಾಣಿ ಕರೆ ಮಾಡಿದರೂ ಫೋನ್ ರಿಸೀವ್ ಮಾಡದೇ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 134ರ ಉಲ್ಲಂಘನೆ ಹಾಗೂ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1ಡಿ) ಅನ್ವಯ ವಿಚಾರಣೆ ಬಾಕಿ ಇರಿಸಿ ಕೂಡಲೇ ಜಾರಿಗೆ ಬರುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅಮಾನತು ಆದೇಶ ಹೊರಡಿಸಿದ್ದಾರೆ.
ಅಮಾನತು ಸಮಯದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರದೇ ಕೇಂದ್ರ ಸ್ಥಾನ ಬಿಟ್ಟು ಹೋಗದಿರಲು ಸೂಚಿಸಲಾಗಿದೆ.