‘ಕಾಂಗ್ರೆಸ್ ಸುಳ್ಳು ಆರೋಪಗಳ ಮೂಲಕ ಜನರ ದಿಕ್ಕು ತಪ್ಪಿಸುತ್ತಿದೆ’

0
Spread the love

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣಸಿಂಗ್ ಆರೋಪ

Advertisement

ವಿಜಯಸಾಕ್ಷಿ ಸುದ್ದಿ, ಗದಗ

ಕಾಂಗ್ರೆಸ್ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದೆ. ಮುಖ್ಯಮಂತ್ರಿ ಮೇಲೆ ವೈಯಕ್ತಿಕ ಆರೋಪ ಮಾಡುತ್ತಿದ್ದಾರೆ. ಕಾಮನ್ ಮ್ಯಾನ್ ಬಸವರಾಜ ಬೊಮ್ಮಾಯಿ ಅವರನ್ನು ಅವಮಾನಿಸುವುದು ರಾಜ್ಯದ ಜನರನ್ನು ಅವಮಾನಿಸಿದಂತೆ ಎನ್ನುವುದನ್ನು ಕಾಂಗ್ರೆಸ್ ಮರೆಯಬಾರದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣಸಿಂಗ್ ಆರೋಪಿಸಿದರು.

ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಆರೋಪ ಮಾಡಲು ಕಾಂಗ್ರೆಸ್ಸಿಗೆ ಯಾವುದೇ ವಿಷಯವಿಲ್ಲ. ಹೀಗಾಗಿ ಸ್ಯಾಂಟ್ರೋ ರವಿ ಆತ್ಮಹತ್ಯೆ ವಿಷಯ ಮುನ್ನಲೆಗೆ ತಂದಿದ್ದಾರೆ. ಕಾಂಗ್ರೆಸ್ ಕೆಲ ತಿಂಗಳಿಂದ ಇಂಥ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ಸಿಗರಿಗೆ ಸುಳ್ಳು ಹೇಳುವುದೇ ಕಾಯಕವಾಗಿದೆ. ಹೀಗಾಗಿ ಉಚಿತ ಕೊಡುಗೆ ಘೋಷಣೆ ಮಾಡುವ ಮೂಲಕ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಪ್ರಯತ್ನ ಮಾಡುತ್ತಿದ್ದಾರೆ. ಬೆರಳೆಣಿಕೆಯ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಅಲ್ಲಿನ ಸಾಧನೆಗಳನ್ನಾದರೂ ಜನರ ಮುಂದಿಡುವ ಕೆಲಸವನ್ನು ಕಾಂಗ್ರೆಸ್ ಮಾಡಲಿ ಎಂದು ಸವಾಲು ಹಾಕಿದರು.

ರಾಜ್ಯ ಬಿಜೆಪಿ ಸರಕಾರದ ಮೇಲೆ ೪೦ ಪ್ರತಿಶತ ಕಮಿಷನ್ ಆರೋಪ ಕಾಂಗ್ರೆಸ್ ಸೃಷ್ಟಿ. ಕಾಂಗ್ರೆಸ್ಸಿಗರ ಆರೋಪದಲ್ಲಿ ಸತ್ಯಾಸತ್ಯತೆ ಇದ್ದರೆ ಎಫ್‌ಐಆರ್ ದಾಖಲಿಸಲಿ, ವೃಥಾ ಆರೋಪ ಮಾಡುವುದು ಕಾಂಗ್ರೆಸ್ ಚಾಳಿ. ಬಿಜೆಪಿ ಇಂಥ ಆರೋಪಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಖಾತೆ ಸಚಿವ ಸಿ.ಸಿ.ಪಾಟೀಲ, ಶಾಸಕರಾದ ಕಳಕಪ್ಪ ಬಂಡಿ, ಎಸ್ ವಿ ಸಂಕನೂರು, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದಪ್ಪ ಪಲ್ಲೇದ, ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ, ಮುಖಂಡರಾದ ಎಮ್.ಎಮ್ ಹಿರೇಮಠ, ವಿನಾಯಕ ಹಬೀಬ ಇದ್ದರು.

ಕಾಂಗ್ರೆಸ್ 200 ಯುನಿಟ್ ಉಚಿತ ವಿದ್ಯುತ್ ಕೊಡುವ ವಾಗ್ದಾನ ಮಾಡಿದೆ. ಒಂದು ವೇಳೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗತ್ಯಕ್ಕೆ ತಕ್ಕಷ್ಟು ವಿದ್ಯುತ್ ಇಲ್ಲದೇ ಉಚಿತವಾಗಿ ಹೇಗೆ ಕೊಡಲು ಸಾಧ್ಯ? ಸದ್ಯ ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಅಲ್ಲಿ ಯಾಕೆ ಉಚಿತವಾಗಿ ವಿದ್ಯುತ್ ಕೊಟ್ಟಿಲ್ಲ? 12 ಬಾರಿ ವಿದ್ಯುತ್ ಬೆಲೆ ಏರಿಕೆ ಮಾಡಿದ್ದು ಏಕೆ ಎನ್ನುವುದನ್ನು ಕಾಂಗ್ರೆಸ್ಸಿಗರು ಉತ್ತರಿಸಬೇಕು.

ಅರುಣಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

Spread the love

LEAVE A REPLY

Please enter your comment!
Please enter your name here