ನಾಮಪತ್ರ ಸಲ್ಲಿಸಿ ವಾಪಾಸು ಹೋಗುವಾಗ ನಡೆದ ಘಟನೆ…..
ವಿಜಯಸಾಕ್ಷಿ ಸುದ್ದಿ, ಗದಗ
ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದು, ಕಾರಿನ ಗ್ಲಾಸ್ ಜಖಂಗೊಂಡ ಘಟನೆ ನಡೆದಿದೆ.

ಇಲ್ಲಿನ ಉಪವಿಭಾಗಾಧಿಕಾರಿಗಳ ಕಛೇರಿ ಮುಂದೆ ಈ ಘಟನೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿ ವಾಪಾಸು ಆಗುವಾಗ ಯಾರೋ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್ ಕೆ ಪಾಟೀಲ್ ಅವರು ನಾಮಪತ್ರ ಸಲ್ಲಿಸುವ ಕಾರ್ಯ ನಿಗದಿಯಾಗಿತ್ತು. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿದ್ದರು.

ಇದರಿಂದಾಗಿ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು, ಪ್ರತಿಭಟನೆಗೆ ಮುಂದಾಗಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಮಾತಿನ ಚಕಮಕಿ ನಡೆಸಿದರು. ಪೊಲೀಸರು ಹಾಗೂ ಅರೆಸೇನಾ ಪಡೆಯು, ಸೇರಿದ್ದ ಕಾರ್ಯಕರ್ತರನ್ನು ಚದುರಿಸಿದರು.

ಸದ್ಯ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ.