ವಿಜಯಸಾಕ್ಷಿ ಸುದ್ದಿ, ಗದಗ:

ಗದಗ-ಬೆಟಗೇರಿ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವಳಿ ನಗರದಾದ್ಯಂತ ವ್ಯಾಪಕ ಪ್ರಚಾರ ನಡೆದಿದೆ. ಆದರೆ, ಚುನಾವಣಾ ಕಾರ್ಯಕ್ಕೆ ಕಾಲೇಜು ಉಪನ್ಯಾಸಕರನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಿದ್ದ ಶಿಕ್ಷಕರು ರಾಷ್ಟ್ರೀಯ ಪಕ್ಷದ ಕಾರ್ಯಕರ್ತರಂತೆ ಚುನಾವಣಾ ಅಖಾಡದಲ್ಲಿ ಕಾಣಿಸಿಕೊಂಡಿದ್ದಾರೆ.
ಹೌದು, ಅವಳಿ ನಗರದ 11ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಶ್ವೇತಾ ರವಿ ದಂಡಿನ ಅವರ ಪರವಾಗಿ ಹಗಲು ರಾತ್ರಿ ಎನ್ನದೇ ಮುಖಂಡ ರವಿ ದಂಡಿನ ಸೇರಿದಂತೆ ಬಿಜೆಪಿಯ ಮುಖಂಡರು, ಕಾರ್ಯಕರ್ತರ ಜೊತೆಗೆ ಪ್ರಚಾರದಲ್ಲಿ ತೊಡಗಿದ್ದಾರೆ.

ಕನಕದಾಸ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಕೆಲವು ಉಪನ್ಯಾಸಕರನ್ನು ಒತ್ತಡದ ಮೂಲಕ ಪ್ರತಿಯೊಂದು ಕಾರ್ಯ ಚಟುವಟಿಕೆಯಲ್ಲಿ ಬಳಸಿಕೊಳ್ಳಲಾಗುತ್ತಿದೆ.
ಇವರೆಲ್ಲರೂ ನಾಮಪತ್ರ ಸಲ್ಲಿಸುವ ವೇಳೆಯೂ ಪಾಲ್ಗೊಂಡಿದ್ದರು ಎನ್ನಲಾಗಿದೆ.
ಯುಜಿಸಿ ಸಂಬಳ ಪಡೆಯುತ್ತಿರುವ ಉಪನ್ಯಾಸಕರು ಕೂಡ ಬಿಜೆಪಿ ಕಾರ್ಯಕರ್ತರಂತೆ ಓಡಾಡೋದು ಪ್ರಜ್ಞಾವಂತರಲ್ಲಿ ಆಕ್ರೋಶ ತರಸಿದೆ. ಇಂತಹ
ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ
ಮಾದರಿ ನೀತಿ ಸಂಹಿತೆ (ಎಂಸಿಸಿ) ತಂಡ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಈಗಲಾದರೂ ಸಂಬಂಧಿಸಿದ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.