ಟಿಕೆಟ್ ಆಕಾಂಕ್ಷೆಗಳಿಂದ ಶ್ರೀಮಂತಗಡದ ಹೊಳಲಮ್ಮದೇವಿ ಮೇಲೆ ಪ್ರಮಾಣ; ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಗೆಲುವಿಗೆ ಪಣ

0
Spread the love

ಶಿರಹಟ್ಟಿ-ಲಕ್ಷ್ಮೇಶ್ವರ -ಮುಂಡರಗಿ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪೂರ್ವಭಾವಿ ಸಭೆ

Advertisement

ಕೆಪಿಸಿಸಿ ಗದಗ ಜಿಲ್ಲಾಧ್ಯಕ್ಷ ಜಿ ಎಸ್. ಪಾಟೀಲ್ ಕರೆ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ

ಶಿರಹಟ್ಟಿ ಮೀಸಲು ಮತಕ್ಷೇತ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಬಯಸಿ ಈ ವರೆಗೆ 14 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಅಂತಿಮವಾಗಿ ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಪಕ್ಷದ ಹಿತದೃಷ್ಟಿಯಿಂದ ಅವರ ಗೆಲುವಿಗೆ ಮುಖಂಡರುಗಳು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್.ಪಾಟೀಲ ಹೇಳಿದರು.

ಅವರು ಮಂಗಳವಾರ ಶಿರಹಟ್ಟಿ ತಾಲೂಕಿನ ಶ್ರೀಮಂತಗಡದಲ್ಲಿ ಶಿರಹಟ್ಟಿ-ಮುಂಡರಗಿ-ಲಕ್ಷ್ಮೇಶ್ವರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಡಿ.ಕೆ.ಶಿವಕುಮಾರ ಅವರು ಆಯ್ಕೆಯಾದ ನಂತರ ಪಕ್ಷಕ್ಕೆ ಹೊಸ ಚೈತನ್ಯ ಬಂದಿದ್ದು, ಜೊತೆಗೆ ಕಳೆದ 50 ವರ್ಷಗಳಿಂದ ಪಕ್ಷ ನಿಷ್ಠೆಯನ್ನು ಹೊಂದಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಕ್ಷವು ಎಐಸಿಸಿ ಅಧ್ಯಕ್ಷ ಹುದ್ದೆ ನೀಡಿದ್ದು ಪಕ್ಷಕ್ಕೆ ಹೆಚ್ಚಿನ ಶಕ್ತಿ ಲಭಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರೂ ಕೂಡಾ ಬಿಜೆಪಿಗೆ ಸಿಂಹಸ್ವಪ್ನರಾಗಿರುವುದು ಮುಂದಿನ ದಿನಗಳಲ್ಲಿ ಅಧಿಕಾರ ಸಿಗುವಂತಹ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಆದ್ದರಿಂದ ಪಕ್ಷ ಸಂಘಟನೆಗೆ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಮುಂದಾಗಬೇಕು.

ಶಿರಹಟ್ಟಿಯಲ್ಲಿ ಆಕಾಂಕ್ಷಿಗಳ ಪ್ರಮಾಣ ಮಾಡಿಸಿದ್ದು ಶ್ಲಾಘನೀಯ. ಇತರರಿಗೆ ಮಾದರಿಯಾದ ಕಾರ್ಯಕ್ರಮ ಇದಾಗಿದೆ ಎಂದರು.

ಮಾಜಿ ಶಾಸಕ ಡಿ.ಆರ್.ಪಾಟೀಲ ಮಾತನಾಡಿ, ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೆಲವು ಅಧಿಕಾರಿ ಸ್ನೇಹಿತರು ನನ್ನ ಬಳಿ ಹೇಳುತ್ತಿದ್ದಾರೆ. ಸಾರ್ವಜನಿಕರು ಸಹ ಹೆದರಿಕೆಯಿಂದ ಜೀವನ ನಡೆಸುವುದು ಅನಿವಾರ್ಯವಾಗಿದೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ಶ್ರಮಿಸೋಣ. ಪಕ್ಷದ ಅಭಿವೃದ್ದಿ ಕೆಲಸಗಳನ್ನು ಜನತೆಗೆ ತಿಳಿಸಿ ಬೇರು ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕು. ಈ ಬಾರಿ ರಾಜ್ಯದಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಪಕ್ಷ ಗೆಲುವು ಸಾಧಿಸಲಿದೆ ಎಂದರು.

ಅರಣ್ಯ, ಕೈಗಾರಿಕೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಟಿ.ಈಶ್ವರ ಮಾತನಾಡಿ, ಸ್ಥಳೀಯರೇ ಶಾಸಕರಾಗಬೇಕು, ಎಐಸಿಸಿ ಮತ್ತು ಕೆಪಿಸಿಸಿ ಸೂಚಿಸುವಂತಹ ಅಭ್ಯರ್ಥಿಗಳ ಬಗ್ಗೆ ಅಪಸ್ವರ ಎತ್ತದೇ ಅವರ ಗೆಲುವಿಗೆ ಶ್ರಮಿಸಿ ಬಿಜೆಪಿ ಸರಕಾರ ಕಿತ್ತೊಗೆದು ಕಾಂಗ್ರೆಸ್ ತರಲು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ ಎಂದರು.

ಹಸನಸಾಬ ದೋಟಿಹಾಳ, ಪ್ರಭುಗೌಡ ಪಾಟೀಲ, ವಾಸಣ್ಣ ಕುರಡಗಿ, ಶಿವಕುಮಾರಗೌಡ ಪಾಟೀಲ, ಶಿವಪ್ರಕಾಶ ಮಹಾಜನಶೆಟ್ಟರ, ಎಸ್.ಪಿ.ಬಳಿಗಾರ, ಭರತ ನಾಯ್ಕ, ಸುಜಾತಾ ದೊಡ್ಡಮನಿ, ಆನಂದ ಗಡ್ಡದ್ದೇವರಮಠ, ಎಲ್.ಡಿ.ಪಾಟೀಲ, ಶೋಭಾ ಮೇಟಿ, ವೀರಣ್ಣ ಅಂಗಡಿ, ಮಹೇಂದ್ರ ಮುಂಡವಾಡ, ದೇವಪ್ಪ ಲಮಾಣಿ, ರಾಮಣ್ಣ ಲಮಾಣಿ (ಶಿಗ್ಲಿ), ಮುತ್ತುರಾಜ ಭಾವಿಮನಿ, ಕೋಟೆಪ್ಪ ವರದಿ, ಸುಶೀಲಾ ಲಮಾಣಿ, ಮಂಜುನಾಥ ಘಂಟಿ, ಮಾಬುಸಾಬ ಲಕ್ಷ್ಮೇಶ್ವರ, ಮಹಾಂತೇಶ ದಶಮನಿ ಮುಂತಾದವರು ಉಪಸ್ಥಿತರಿದ್ದರು.

14 ಅಭ್ಯರ್ಥಿಗಳಿಂದ ಪ್ರಮಾಣ

ಕಾರ್ಯಕ್ರಮದಲ್ಲಿ ಶಿರಹಟ್ಟಿ ಮೀಸಲು ಮತಕ್ಷೇತ್ರದಿಂದ ಈ ವರೆಗೆ 14 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಸೇರಿದಂತೆ ಒಟ್ಟು 14 ಜನ ಆಕಾಂಕ್ಷಿಗಳಿಂದ ಪಕ್ಷದ ಜಿಲ್ಲಾಧ್ಯಕ್ಷ ಜಿ.ಎಸ್.ಪಾಟೀಲ, ಮಾಜಿ ಶಾಸಕ ಜಿ.ಎಸ್.ಗಡ್ಡದ್ದೇವರಮಠ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಮಾಯೂನ್ ಮಾಗಡಿ ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ಶ್ರಮಿಸುವ ಶ್ರೀ ಹೊಳಲಮ್ಮದೇವಿಯ ಮೇಲೆ ಪ್ರಮಾಣವಚನ ಬೋಧಿಸಿ ಒಗ್ಗಟ್ಟು ಪ್ರದರ್ಶಿಸಿದರು.


Spread the love

LEAVE A REPLY

Please enter your comment!
Please enter your name here