ನೀರು ಕುಡಿಯಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕಿಯರ ಸಾವು

0
Spread the love

ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

Advertisement

ವಿಜಯಸಾಕ್ಷಿ ಸುದ್ದಿ, ಮುಂಡರಗಿ:

ನೀರು ಕುಡಿಯಲು ಹೋಗಿದ್ದರು ಎನ್ನಲಾದ ಮೂವರು ಬಾಲಕಿಯರು ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಅಸುನೀಗಿರುವ ದುರ್ಘಟನೆ ಮುಂಡರಗಿ ತಾಲ್ಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ. ಬಸವರಾಜ ನೂರಪ್ಪ ಲಮಾಣಿ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ಸಂಭವಿಸಿದೆ.

ಅತ್ತಿಕಟ್ಟಿ ತಾಂಡಾದ ಒಂದೇ ಕುಟುಂಬದ ಸುನೀತಾ(೧೩), ಅಂಕಿತಾ(೧೦) ಹಾಗೂ ಡೋಣಿ ತಾಂಡಾದ ಸುನೀತಾ ಲೋಕೇಶ್ ಲಮಾಣಿ(೧೦) ಮೃತ ದುರ್ದೈವಿಗಳಾಗಿದ್ದಾರೆ.

ಈ ಮೂವರು ಮೃತ ಬಾಲಕಿಯರು ಕುರಿ ಮರಿ ಮೇಯಿಸಲು ಜಮೀನಿಗೆ ತೆರಳಿದ್ದರು. ಈ ವೇಳೆ ಬಿಸಿಲಿನ ಬೇಗೆಗೆ ನೀರಿನ ದಾಹ ನೀಗಿಸಿಕೊಳ್ಳಲು ಕೃಷಿ ಹೊಂಡದಲ್ಲಿ ನೀರು ಕುಡಿಯಲು ತೆರಳಿದ್ದಾಗ ಕಾಲು ಜಾರಿ ಬಿದ್ದು ಬಾಲಕಿಯರು ಅಸುನೀಗಿರಬಹುದು ಎಂದು ಶಂಕಿಸಲಾಗಿದೆ.

ತಂದೆ-ತಾಯಿ ಜೊತೆ ಗೋವಾದಲ್ಲಿ ವಾಸವಿರುವ ಅತ್ತಿಕಟ್ಟಿ ತಾಂಡಾದ ಸುನೀತಾ ಹಾಗೂ ಅಂಕಿತಾ ಚಿಕ್ಕಪ್ಪನ ಮದುವೆಗೆ ಬಂದಿದ್ದರು. ಸೋಮವಾರ ನೀರು ಕುಡಿಯಲು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ನೀರಿನಲ್ಲಿ ಮುಳುಗಿದ್ದ ಬಾಲಕಿಯರ ಮೃತದೇಹಗಳನ್ನು ಸ್ಥಳೀಯರ ಸಹಾಯದಿಂದ ಹೊರತೆಗೆದಿದ್ದು, ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಮುಂಡರಗಿ ತಹಸೀಲ್ದಾರ ಆಶಪ್ಪ ಪೂಜಾರ ಭೇಟಿ ನೀಡಿ ಪರಿಶೀಲಿಸಿದರು. ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here