ಗದಗ ನಗರಸಭೆ ಅಧ್ಯಕ್ಷ ಚುನಾವಣೆಯಲ್ಲಿ ಪ್ರಮಾದ; ಕಾಂಗ್ರೆಸ್‌ನ ಅರ್ಜಿ ವಜಾಗೊಳಿಸಿದ ಹೈಕೋರ್ಟ್

0
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ/ಗದಗ:

Advertisement

ಜ.24ರಂದು ನಡೆದ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಪ್ರಮಾದಗಳನ್ನು ಪ್ರಶ್ನಿಸಿ ಕಾಂಗ್ರೆಸ್‌ನ ನಗರಸಭೆ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ಸೋಮವಾರ ವಜಾಗೊಳಿಸಿ ಆದೇಶಿಸಿದೆ.

ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣದ ಕುರಿತು ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅಲ್ಲಿಯೇ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ಸೋಮವಾರ ಆದೇಶಿಸಿದೆ. ಅಲ್ಲದೆ, ಚುನಾವಣಾಧಿಕಾರಿಗಳು ಆಗಿದ್ದ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಅವರ ಕರ್ತವ್ಯಲೋಪದ ಬಗ್ಗೆ ಸಂಪೂರ್ಣ ವಿಚಾರಣೆ ನಡೆಸಬೇಕು. ಬಳಿಕ ತೆಗೆದುಕೊಂಡ ಕ್ರಮದ ಬಗ್ಗೆ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗೆ ಆದೇಶಿಸಿದೆ. ಇದರಿಂದ ಕಾಂಗ್ರೆಸ್ ಸದಸ್ಯರಿಗೆ ತೀವ್ರ ಮುಖಭಂಗ ಅನುಭವಿಸುವಂತಾಗಿದ್ದರೂ, ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆದಿದೆ ಎನ್ನಲಾದ ಪ್ರಮಾದಗಳ ಬಗ್ಗೆ ಜಿಲ್ಲಾ ನ್ಯಾಯಾಲಯದಲ್ಲಿ ಪೈಲ್ ಮಾಡಲು ಹೈಕೋರ್ಟ್ ಅವಕಾಶ ನೀಡಿದ್ದಕ್ಕೆ ತೃಪ್ತಿಪಡುವಂತಾಗಿದೆ.

ಜ.24ರಂದು ನಡೆದ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಪ್ರಮಾದಗಳನ್ನು ಪ್ರಶ್ನಿಸಿ ನಗರಸಭೆ ಸದಸ್ಯರಾದ ಲಕ್ಷ್ಮಣ ಚಂದಾವರಿ, ಶಕುಂತಲಾ ಅಕ್ಕಿ, ಕೃಷ್ಣಾ ಪರಾಪುರ, ಬರಕತ್ ಅಲಿ ಮುಲ್ಲಾ, ರವಿಕುಮಾರ್ ಕಮತರ, ಜೈನುಲಾಬ್ದಿನ್ ನಮಾಜಿ ಹಾಗೂ ಚಂದ್ರಶೇಖರಗೌಡ ಕರಿಸೋಮನಗೌಡರ ಸೇರಿ ಏಳು ಜನ ಕಾಂಗ್ರೆಸ್ ಸದಸ್ಯರು ಜ.28ರಂದು ಹೈಕೋರ್ಟ್ ಮೊರೆ ಹೋಗಿದ್ದರು. ಅಧಿಕಾರಿಗಳು ಪಾರದರ್ಶಕ ಚುನಾವಣೆ ನಡೆಸಿಲ್ಲ. ಹೀಗಾಗಿ ಮರು ಚುನಾವಣೆ ನಡೆಸುವಂತೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು.

ಫೆ.1ರಂದು ಎಲ್.ಡಿ.ಚಂದಾವರಿ ಸೇರಿ ಏಳು ಜನ ಕಾಂಗ್ರೆಸ್ ಸದಸ್ಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಬಿ.ಎಂ.ಶ್ಯಾಮಪ್ರಸಾದ್ ಅವರಿದ್ದ ಪೀಠ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ಗೆಜೆಟ್‌ನಲ್ಲಿ ಪ್ರಕಟಿಸದಂತೆ ಮಧ್ಯಂತರ ಆದೇಶ ನೀಡಿ ಫೆ.21ಕ್ಕೆ ವಿಚಾರಣೆ ಮುಂದೂಡಿತ್ತು. ಫೆ.21ರಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಮಾರ್ಚ್ 2ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿ, ಅಂದು ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ತೀರ್ಪು ಕಾಯ್ದಿರಿಸಿತ್ತು. ಬಳಿಕ ಸೋಮವಾರ (ಮಾ.14)ದಂದು ಹೈಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ.


Spread the love

LEAVE A REPLY

Please enter your comment!
Please enter your name here