ವಿಜಯಸಾಕ್ಷಿ ಸುದ್ದಿ, ಗದಗ
ತಾಲೂಕಿನ ಅಸುಂಡಿ, ಬಿಂಕದಕಟ್ಟಿ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಕಾಟ ಜೋರಾಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಮೇ 23ರಂದು ರಾತ್ರಿಯ ಸಮಯದಲ್ಲಿ ಅಸುಂಡಿ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಹೈನಾವೊಂದು ಕೊಟ್ಟಿಗೆಯಲ್ಲಿದ್ದ ಜಾನುವಾರುಗಳ ಮೇಲೆ ದಾಳಿ ನಡೆಸಿತ್ತು. ಶುಕ್ರವಾರ ಬೆಳಿಗ್ಗೆ ಹೈನಾ ಇಲ್ಲಿನ ಸಿದ್ದಯ್ಯ ಮಠಪತಿ ಎಂಬುವರು ತೋಟದ ಬಳಿ ಮತ್ತೆ ಪ್ರತ್ಯಕ್ಷವಾಗಿದ್ದು ಆತಂಕ ಮೂಡಿಸಿದೆ.
ಮಳಿ ಹಳ್ಳದ ಸರುವಿನಲ್ಲಿ ಹೈನಾ ಠಿಕಾಣಿ ಹೂಡಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ, ಸ್ಥಳಕ್ಕೆ ಬಂದು ಸೂಕ್ತ ಕ್ರಮ ಕೈಗೊಳ್ಳದಿರುವ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ತೋಟದ ಮನೆ ಹಾಗೂ ಜಮೀನಿನಲ್ಲಿ ಕೆಲಸ ಮಾಡುವ ಕೃಷಿ ಕಾರ್ಮಿಕರ ಮೇಲೆ ದಾಳಿ ಮಾಡುವ ಆತಂಕ ಗ್ರಾಮಸ್ಥರನ್ನು ಕಾಡತೊಡಗಿದೆ. ಒಂದು ತಿಂಗಳ ಹಿಂದಷ್ಟೇ ಬಿಂಕದಕಟ್ಟಿ ಗ್ರಾಮದ ಬಳಿ ಚಿರತೆಯೂ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಆತಂಕದಿಂದಲೇ ಓಡಾಡುವಂತಾಗಿದೆ.