ಗ್ರಾಮ ವಾಸ್ತವ್ಯದಲ್ಲಿ ತಹಸೀಲ್ದಾರ್ ವಾಣಿ ಸಲಹೆ……ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ…….
ವಿಜಯಸಾಕ್ಷಿ ಸುದ್ದಿ, ರೋಣ
ಗ್ರಾಮಸ್ಥರು ಸರಿಯಾದ ದಾಖಲಾತಿಗಳನ್ನು ಒದಗಿಸುವ ಮೂಲಕ ಹಕ್ಕು ಪತ್ರಗಳನ್ನು ಪಡೆದುಕೊಳ್ಳಬೇಕು ಎಂದು ತಹಸೀಲ್ದಾರ್ ವಾಣಿ ಉಂಕಿ ಹೇಳಿದರು.
ಅವರು ಶನಿವಾರ ತಾಲೂಕಿನ ಮೇಲ್ಮಠ ಗ್ರಾಮದಲ್ಲಿ ಜರುಗಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈಗಾಗಲೇ ಗ್ರಾಮಲೆಕ್ಕಾಧಿಕಾರಿಗಳು ಹಾಗೂ ಪಿಡಿಒ ಕೂಡಿಕೊಂಡು ಸರ್ವೆ ಕಾರ್ಯವನ್ನು ನಡೆಸಿದರೂ ಸಹ 90 ಜನರ ಪೈಕಿ 8 ಜನರು ಮಾತ್ರ ದಾಖಲಾತಿಗಳನ್ನು ಒದಗಿಸಿದ್ದಾರೆ. ಹೀಗಾಗಿ ಇನ್ನುಳಿದ 82 ಜನರು ಸಹ ದಾಖಲಾತಿಗಳನ್ನು ಒದಗಿಸುವ ಮೂಲಕ ನಿವೇಶನದ ಹಕ್ಕು ಪತ್ರಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಒತ್ತುವರಿ ಕುರಿತು ಪರಿಶೀಲನೆ ನಡೆಸಲು ಸರ್ವೆ ಇಲಾಖೆಯ ಅಧಿಕಾರಿಗಳನ್ನು ಗ್ರಾಮಕ್ಕೆ ಕಳುಹಿಸಿಕೊಡಲಾಗುವುದು ಎಂದರು. ಈ ಬಾರಿ ಗ್ರಾಮ ವಾಸ್ತವ್ಯ ಮೇಲ್ಮಠ ಗ್ರಾಮದಲ್ಲಿ ಅರ್ಥ ಪೂರ್ಣವಾಗಿ ನಡೆಯಿತು. ಮೇಲ್ಮಠ ತಾಲೂಕಿನ ಅತಿ ಚಿಕ್ಕ ಗ್ರಾಮವಾಗಿದ್ದು, ಕೇವಲ 852 ಜನಸಂಖ್ಯೆಯನ್ನು ಹೊಂದಿದೆ. ಗ್ರಾಮದಲ್ಲಿ ಸಂಚರಿಸಿ ಬಂದ ತಹಸೀಲ್ದಾರ್ ವಾಣಿ ಉಂಕಿಯವರು ಸಮಯವನ್ನು ವ್ಯರ್ಥ ಮಾಡದೆ ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ಲಭ್ಯವಾಗುವ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡುವ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದರು.
ಇದು ಗ್ರಾಮಸ್ಥರ ಮೆಚ್ಚುಗೆಗೆ ಕಾರಣವಾಯಿತು. ಮುಖ್ಯವಾಗಿ ಸರಕಾರಿ ಶಾಲಾ ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಅವಕಾಶ ಕೊಟ್ಟಿದ್ದು ಪಾಲಕರಲ್ಲಿ ಸಂತಸ ಮೂಡಿಸಿತ್ತು. ಸಭೆಯಲ್ಲಿ ಬರಿ ಏಳು ಅರ್ಜಿಗಳು ಮಾತ್ರ ಸಲ್ಲಿಕೆಯಾದವು.
ಸಭೆಯಲ್ಲಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು,ಪಿಡಿಒ, ಗ್ರಾಮಲೆಕ್ಕಾಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.