ವಿಜಯಸಾಕ್ಷಿ ಸುದ್ದಿ, ಗದಗ
ತಾಲೂಕಿನ ಬಿಂಕದಕಟ್ಟಿ ಹತ್ತಿರ ಇರುವ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಒಣಗಿದ್ದ ಹುಲ್ಲಿಗೆ ಬೆಂಕಿ ವ್ಯಾಪಿಸಿದ್ದರಿಂದ ಸುಮಾರು 20 ಗುಂಟೆ ಜಾಗದ ಹುಲ್ಲು ಬೆಂಕಿಗೆ ಆಹುತಿಯಾಗಿದೆ. ಆದರೆ ಸಸ್ಯೋದ್ಯಾನದ ನರ್ಸರಿ ಹಾಗೂ ಇನ್ನಿತರ ಗಿಡಮರಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ.
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅರಣ್ಯ ಇಲಾಖೆ ಕಚೇರಿ ಹಾಗೂ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯ ಇದ್ದಿದ್ದರಿಂದ ಹೆಚ್ಚಿನ ಸಿಬ್ಬಂದಿ ಸಸ್ಯೋದ್ಯಾನಕ್ಕೆ ತೆರಳಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.