ವಿಜಯಸಾಕ್ಷಿ ಸುದ್ದಿ, ಗದಗ
ಅಪ್ರಾಪ್ತೆಯನ್ನು ಪ್ರೀತಿಸುವದಾಗಿ ಹೇಳಿ ಅಪಹರಿಸಿ ಅತ್ಯಾಚಾರ ನಡೆಸಿದ ಆರೋಪಿತನ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಗದಗ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಪ್ರಕರಣದ ಆರೋಪಿ ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದ ಯಲ್ಲಪ್ಪ ಶಿವಪ್ಪ ಹಾಲಿಯವರ ಎಂಬಾತ ಅಪ್ರಾಪ್ತೆಯನ್ನು ಪ್ರೀತಿಸುವದಾಗಿ ಹೇಳಿ ಅವಳನ್ನು ಖಾಸಗಿ ವಾಹನದಲ್ಲಿ ಅಪಹರಿಸಿಕೊಂಡು ಶಿರೋಳ ಗ್ರಾಮಕ್ಕೆ ಕರೆದುಕೊಂಡು ಹೋಗಿ ತನ್ನ ಮನೆಯಲ್ಲಿ ಇರಿಸಿಕೊಂಡು ಅಪ್ರಾಪ್ತೆಯೆಂದು ತಿಳಿದಿದ್ದರೂ ಅತ್ಯಾಚಾರ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ರೋಣ ಪೊಲೀಸ್ ಠಾಣೆಯಲ್ಲಿ ಕಲಂ 363, 366, 376(2)(ಐ) ಐಪಿಸಿ ಕಲಂ4 ಮತ್ತು 6, ಪೋಕ್ಸೋ ಕಾಯ್ದೆ 2012ರ ಪ್ರಕಾರ ಪ್ರಕರಣ ದಾಖಲಾಗಿತ್ತು.
ಪ್ರಸ್ತುತ ಪ್ರಕರಣದಲ್ಲಿ ಸಿಪಿಐ ಕೆ.ಸಿ. ಪ್ರಕಾಶ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ 22.9.2018ರಂದು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.
ಸಾಕ್ಷಿ ವಿಚಾರಣೆ ನಡೆಸಿದ ನ್ಯಾಯಾಲಯವು ಅಪರಾಧವು ಸಾಬೀತಾಗಿದ್ದರಿಂದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 1,10,000ರೂ. ಗಳನ್ನು ದಂಡವಾಗಿ ನೊಂದ ಬಾಲಕಿಗೆ ಪರಿಹಾರ ನೀಡುವಂತೆ ನ್ಯಾಯಾಧೀಶರಾದ ರಾಜೇಶ್ವರ ಶೆಟ್ಟಿ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಅಮರೇಶ ಉಮಾಪತಿ ಹಿರೇಮಠ ವಾದ ಮಂಡಿಸಿದ್ದರು.