ಬೆಂಗಳೂರು:- ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆ ಬಿಜೆಪಿಯ ಐವರು ನಾಯಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಮೂವರು ಶಾಸಕರು ಹಾಗೂ ಇಬ್ಬರು ಮಾಜಿ ಸಚಿವರಿಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಪಕ್ಷದ ಆಂತರಿಕ ವಿಚಾರ ಸಾರ್ವಜನಿಕ ವೇದಿಕೆಯಲ್ಲಿ ಚರ್ಚೆ ಮಾಡಿದ ಆರೋಪದ ಮೇಲೆ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ಹಾಗೂ ಬಿ.ಪಿ.ಹರೀಶ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದರ ಜೊತೆಗೆ ಯಡಿಯೂರಪ್ಪನವರ ಆಪ್ತರಾದ ಮಾಜಿ ಸಚಿವರಾದ ರೇಣುಕಾಚಾರ್ಯ ಮತ್ತು ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ಕೇಳಿ ಶೋಕಾಸ್ ನೊಟೀಸ್ ಜಾರಿ ಮಾಡಿ 72 ಗಂಟೆಯೊಳಗೆ ಉತ್ತರಿಸುವಂತೆ ಸೂಚನೆ ನೀಡಿದೆ. ಶಾಸಕ ಬಿ.ಪಿ ಹರೀಶ್ ಅವರು ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿದ್ದರೆ, ಮಾಜಿ ಸಚಿವರಾದ ಎಂಪಿ ರೇಣುಕಾಚಾರ್ಯ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿಜಯೇಂದ್ರ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನು ಎಸ್ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ರೆಬೆಲ್ ಶಾಸಕರಾಗಿದ್ದು, ಇವರು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಅಲ್ಲದೇ ಬಹಿರಂಗವಾಗಿಯೇ ಕಾಂಗ್ರೆಸ್ ನಾಯಕರ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಇವರುಗಳಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದ್ದು, 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚಿಸಲಾಗಿದೆ.