ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಈ ಬಾರಿಯ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ.
ಮುಂದಿನ ಸುತ್ತಿನ ರಣಜಿ ಪಂದ್ಯಗಳಲ್ಲಿ ಗಾಯದ ಕಾರಣಕ್ಕೆ ವಿರಾಟ್ ಕೊಹ್ಲಿ ಹಾಗೂ ಕೆ.ಎಲ್.ರಾಹುಲ್ ಆಟವಾಡುತ್ತಿಲ್ಲ ಎನ್ನಲಾಗಿದೆ. ನಾವು ಗಾಯಗೊಂಡಿದ್ದು, ಜನವರಿ 23ರಿಂದ ಪ್ರಾರಂಭಗೊಳ್ಳಲಿರುವ ರಣಜಿ ಪಂದ್ಯಗಳಲ್ಲಿ ಆಟವಾಡಲು ಸಾಧ್ಯವಾಗುತ್ತಿಲ್ಲ ಎಂದು ವಿರಾಟ್ ಕೊಹ್ಲಿ ಹಾಗೂ ಕೆ.ಎಲ್.ರಾಹುಲ್ ಇಬ್ಬರೂ ಬಿಸಿಸಿಐನ ವೈದ್ಯಕೀಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳೆ ವಿರಾಟ್ ಕೊಹ್ಲಿ ಕುತ್ತಿಗೆ ನೋವಿಗೆ ತುತ್ತಾಗಿದ್ದರು. ಈ ನೋವಿನಿಂದ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಅಲ್ಲದೆ ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಅವರು ರಣಜಿ ಟೂರ್ನಿಯ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.
ಇನ್ನು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಕೆಎಲ್ ರಾಹುಲ್ ಮೊಣಕೈಗೆ ಗಾಯವಾಗಿತ್ತು. ಈ ಗಾಯವು ಸಂಪೂರ್ಣ ಗುಣವಾಗಿಲ್ಲ. ಹೀಗಾಗಿ ರಣಜಿ ಟೂರ್ನಿಯಿಂದ ಹೊರಗುಳಿಯುವುದಾಗಿ ರಾಹುಲ್ ಬಿಸಿಸಿಐಗೆ ತಿಳಿಸಿದ್ದಾರೆ. ಇದೇ ಕಾರಣದಿಂದಾಗಿ ಅವರು ವಿಜಯ ಹಝಾರೆ ಟೂರ್ನಿಯಿಂದಲೂ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.