ವಿಜಯಸಾಕ್ಷಿ ಸುದ್ದಿ, ಧಾರವಾಡ: ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರುಗಳಾದ ಜಂಟಿ ಸಲಹೆಗಾರ ಡಾ. ಪವನ ಕುಮಾರ್ ಸಿಂಗ್, ಹಿರಿಯ ಸಂಶೋಧನಾ ಅಧಿಕಾರಿ ಅಭಿಷೇಕ್ ಶರ್ಮ, ಹಿರಿಯ ಸಮಾಲೋಚಕ ಕುಲಾಲ್ ಚಕ್ರವರ್ತಿ ಸೇರಿದಂತೆ ನಾಲ್ಕು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆಗಳಲ್ಲಿ ಸುಧಾರಿತ ಮತ್ತು ಪರಿಣಾಮಕಾರಿ ವಿಪತ್ತು ನಿರ್ವಹಣೆ ಕುರಿತು ಕಲಬುರ್ಗಿ, ಗದಗ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರುಗಳೊಂದಿಗೆ ಹುಬ್ಬಳ್ಳಿಯ ಸರ್ಕಾರಿ ಅತಿಥಿ ಗೃಹದಲ್ಲಿ ಸೋಮವಾರ ಸಭೆ ಜರುಗಿತು.
ಹುಬ್ಬಳ್ಳಿ ನಗರದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಹಾಯವಾಣಿ ಕೇಂದ್ರಕ್ಕೆ ಭೇಟಿ ನೀಡಿ ವಿಪತ್ತಿನ ಕುರಿತು ಪೂರ್ವಸಿದ್ಧತೆ ಮತ್ತು ಸಾರ್ವಜನಿಕರಿಗೆ ಮಾಹಿತಿ ನೀಡುವ ಕುರಿತು ಪರಿಶೀಲಿಸಿ, ಮಹಾನಗರ ಪಾಲಿಕೆಯ ಆಯುಕ್ತರೊಂದಿಗೆ ಚರ್ಚೆ ಮಾಡಿದರು. ನವಲಗುಂದ ತಾಲೂಕಿನ ಬೆಣ್ಣೆಹಳ್ಳ ಮತ್ತು ತುಪ್ಪರಿ ಹಳ್ಳಗಳ ಪ್ರವಾಹಕ್ಕೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ, ಪ್ರವಾಹದ ಕುರಿತು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರ ಶಾಸಕ ಎನ್.ಎಚ್. ಕೋನರಡ್ಡಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ತಹಸೀಲ್ದಾರ ಸುಧೀಂದ್ರ ಸಾವುಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.