ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಸರಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಮತ್ತು ಸರಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸಿ ಸರ್ಕಾರದ ನಿರ್ದೆಶನದ ಪ್ರಕಾರ ಕೆಲಸ ಮಾಡಲು ಜಿಲ್ಲಾಡಳಿತ ಸನ್ನದ್ಧವಿದೆ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.
ಅವರು ಶುಕ್ರವಾರ ಶಿರಹಟ್ಟಿಯ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.
ಎಲ್ಲ ತಾಲ್ಲೂಕುಗಳ ಭೌಗೋಳಿಕ ಪರಿಶೀಲನೆ ನಡೆಸಲಾಗುತ್ತಿದ್ದು, ಪರಿಶೀಲನೆ ವೇಳೆ ಸಮಸ್ಯೆಗಳು ಕಂಡು ಬಂದರೆ ಅವುಗಳನ್ನು ಸರಿಪಡಿಸಲಾಗುವುದು. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಒಳ್ಳೆಯ ಮಳೆಯಾಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ಇಲ್ಲ. ಜಿಲ್ಲೆಯಲ್ಲಿ ಪ್ರತಿನಿತ್ಯ 60-70 ಡೆಂಘಿ ಕೇಸ್ಗಳ ಟೆಸ್ಟ್ ಮಾಡಲಾಗುತ್ತಿದ್ದು, ಅದರಲ್ಲಿ ಶೇ.1ರಷ್ಟು ಪಾಸಿಟಿವ್ ಬರುತ್ತಿದೆ. ಕಳೆದ ವಾರದಿಂದ ಪಾಸಿಟಿವ್ ಪ್ರಮಾಣ ಕಡಿಮೆ ಇದೆ. ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಲಾರ್ವಾ ಸರ್ವೆ ನಡೆಸಿ ನೀರು ಶೇಖರಣೆಯಾಗುವ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಆರೋಗ್ಯ ಇಲಾಖೆ ವತಿಯಿಂದ ಜಾಗೃತಿ ಕಾರ್ಯಕ್ರಮಗಳು ಜರುಗುತ್ತಿವೆ ಎಂದರು.
ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ನಗರಾಭಿವೃದ್ಧಿ ಕೋಶದ ಮಾರುತಿ ಬ್ಯಾಕೋಡ್, ತಹಸೀಲ್ದಾರ ಅನಿಲ ಬಡಿಗೇರ, ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಿಮನಿ, ಗ್ರೇಡ್-2 ತಹಸೀಲ್ದಾರ ಭಜಂತ್ರಿ, ಎಡಿಎ ರೇವಣೆಪ್ಪ ಮನಗೂಳಿ, ಕಂದಾಯ ನಿರೀಕ್ಷಕ ಅಡಿವೆಣ್ಣವರ, ಎಸ್.ಎಸ್. ಅಸ್ಕಿ ಮುಂತಾದವರು ಉಪಸ್ಥಿತರಿದ್ದರು.
ತಹಸೀಲ್ದಾರ ಕಚೇರಿಯ ಅಟಲ್ಜೀ ಜನಸ್ನೇಹಿ ಕೇಂದ್ರ, ಆಧಾರ್ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಅಲ್ಲಿಯ ಸಿಬ್ಬಂದಿಗಳೊಡನೆ ಚರ್ಚಿಸಿ ಮಾಹಿತಿ ಪಡೆದರು. ಬಾಕಿ ಇರುವ ಅರ್ಜಿಗಳನ್ನು ಶೀಘ್ರವೇ ಸರಿಪಡಿಸುವಂತೆ ಸೂಚನೆ ನೀಡಿದರು. ಸಬ್ ರಿಜಿಸ್ಟಾçರ್ ಕಚೇರಿ ಮತ್ತು ಭೂ ದಾಖಲೆಗಳ ಇಲಾಖೆಗಳಿಗೂ ತೆರಳಿ ಪರಿಶೀಲನೆ ನಡೆಸಿದರು. ತದನಂತರ ಪಟ್ಟಣ ಪಂಚಾಯಿತಿ ಕಚೇರಿಗೆ ತೆರಳಿ ಸಿಬ್ಬಂದಿಗಳೊಡನೆ ಚರ್ಚಿಸಿ, ಘನತ್ಯಾಜ್ಯ ವಸ್ತುಗಳ ವಿಲೇವಾರಿ ಘಟಕಕ್ಕೂ ಭೇಟಿ ನೀಡಿದರು.