ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಮತ ಚಲಾಯಿಸುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ. ಅಲ್ಲದೆ ಮತ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವ ಬಲಪಡಿಸಲು ಸಾಧ್ಯ ಎಂದು ಗೋವನಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜೆ.ಆರ್. ಕರುಬರು ಹೇಳಿದರು.
ಲಕ್ಷ್ಮೇಶ್ವರ ತಾಲೂಕಿನ ಗೋವನಾಳ ಗ್ರಾಮದ ಉದ್ಯೋಗ ಖಾತ್ರಿ ಸಮುದಾಯ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪ್ರಜಾಪ್ರಭುತ್ವ ರಾಷ್ಟçದಲ್ಲಿ ಮತದಾನ ಜನರ ಪ್ರಮುಖ ಹಕ್ಕು ಮತ್ತು ಕರ್ತವ್ಯವಾಗಿದೆ. ಮತದಾನ ಮತ್ತು ಚುನಾವಣೆ ಎರಡೂ ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಚುನಾವಣೆಯ ಯಶಸ್ಸು ಮತದಾನವನ್ನು ಅವಲಂಬಿಸಿದೆ. ಆದ್ದರಿಂದ, ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಲು ಮನವಿ ಮಾಡಿದರು. ಮೇ 7ರಂದು ಲೋಕಸಭೆ ಚುನಾವಣೆಗೆ ಮತದಾನ ನಿಗದಿಯಾಗಿದ್ದು, ಎಲ್ಲರೂ ಪ್ರಜಾಪ್ರಭುತ್ವದ ಮತದಾನದಲ್ಲಿ ಭಾಗಿಯಾಗುವಂತೆ ತಿಳಿಸಿದರು. ಈ ಬೇಸಿಗೆ ಅವಧಿಯಲ್ಲಿ ಹೆಚ್ಚು ಕೆಲಸ ಒದಗಿಸಲು ನರೇಗಾ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿ ಆರಂಭಿಸಲಾಗಿದ್ದು, ರೈತರು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಬಿಎಫ್ಟಿ ತೀರಕಪ್ಪ ಬಾಲೆಹೊಸೂರ ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು. ಡಿಇಒ ಶಿವಯೋಗಿ ಸೊರಟೂರ, ಮೌನೇಶ ಬಡಿಗೇರ, ಗ್ರಾ.ಪಂ ಸಿಬ್ಬಂದಿಗಳು, ನರೇಗಾ ಕಾಯಕ ಬಂಧುಗಳು, ಕೂಲಿ ಕಾರ್ಮಿಕರು ಇದ್ದರು.