ಅಮರಾವತಿ :- ದೇವಸ್ಥಾನದ ಗೋಡೆ ಕುಸಿದು ಸುಮಾರು 8 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂನಲ್ಲಿ ಜರುಗಿದೆ.
ಇಂದು ಬೆಳಗ್ಗೆ ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ಚಂದನೋತ್ಸವಂ ವೇಳೆ ಈ ದುರಂತ ಸಂಭವಿಸಿದೆ. ಚಂದನೋತ್ಸವದಲ್ಲಿ ವರಾಹ ಲಕ್ಷ್ಮೀ ನರಸಿಂಹಸ್ವಾಮಿಯ ನಿಜರೂಪ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಇದೇ ವೇಳೆ ದೇವಸ್ಥಾನದಲ್ಲಿ ಇತ್ತೀಚಿಗೆ ನಿರ್ಮಿಸಲಾಗಿದ್ದ 20 ಅಡಿ ಉದ್ದದ ಹೊಸ ಗೋಡೆಯೊಂದು ಕುಸಿದಿದೆ. ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಸ್ಥಳಕ್ಕೆ ತಕ್ಷಣವೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದವು. ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಕಿಂಗ್ ಜಾರ್ಜ್ ಆಸ್ಪತ್ರೆಗೆ ರವಾನಿಸಲಾಗಿದೆ.