ಹಾವೇರಿ:- ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಖಾತೆ ಇಂದೀಕರಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ವಾಸವಿದ್ದ ಮನೆಗಳನ್ನು ಖಾಲಿ ಮಾಡಿಸಬಹುದು ಎಂಬ ಭೀತಿಯಿಂದ ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದೆ.
ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡ ಮೊಹಮ್ಮದ್ ರಫಿ ಎಂಬುವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದೆ. ಅಲ್ಲದೆ, ಮನೆ ಮುಂದಿದ್ದ ಬೈಕ್ ಅನ್ನು ಜಖಂ ಮಾಡಲಾಗಿದೆ.
ಕಲ್ಲು ತೂರಾಟ ಹಾಗೂ ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ, ರಾತ್ರೋರಾತ್ರಿ ಹಾವೇರಿ ಡಿಸಿ, ಎಸ್ಪಿ, ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್, ಎಸ್ಪಿ ಅಂಶುಕುಮಾರ್ ಕಡಕೋಳ ಗ್ರಾಮಕ್ಕೆ ದೌಡಾಯಿಸಿದರು.
ಮತ್ತೆ ಅಹಿತಕರ ಘಟನೆ ನಡೆಯದಂತೆ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದರು. ಗಲಾಟೆಗೆ ಕಾರಣರಾದವರನ್ನು ಬಂಧಿಸಲು ಮುಂದಾದ ಪೊಲೀಸರು, ಗಲಾಟೆಗೆ ಪ್ರಚೋದನೆ ನೀಡಿದವರನ್ನೂ ಪತ್ತೆ ಮಾಡಲು ಮುಂದಾಗಿದ್ದಾರೆ.



