ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್ ಸರ್ಕಾರದ ಒಳಮೀಸಲಾತಿ ನೀತಿಯಿಂದ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಿದ್ದು, ಇದನ್ನು ಖಂಡಿಸಿ ಹಾಗೂ ತಾಂಡಾಗಳಲ್ಲಿ ಜಾಗೃತಿ ಮೂಡಿಸಲು ಶೀಘ್ರದಲ್ಲೇ ‘ಕಾಂಗ್ರೆಸ್ ಹಠಾವೋ, ತಾಂಡಾ ಬಚಾವೋ’ ಆಂದೋಲನ ಆರಂಭಿಸಲಾಗುವುದು ಎಂದು ಮಾಜಿ ಸಂಸದ ಡಾ. ಉಮೇಶ್ ಜಾಧವ್ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗಮೋಹನ್ ದಾಸ್ ವರದಿಯಲ್ಲಿನ ದತ್ತಾಂಶಗಳ ಆಧಾರದ ಮೇಲೆ ಜಾರಿಯಾದ ಒಳಮೀಸಲಾತಿಯಿಂದ ಬಂಜಾರ ಸಮುದಾಯಕ್ಕೆ ತೀವ್ರ ಅನ್ಯಾಯವಾಗಿದೆ ಎಂದು ಆರೋಪಿಸಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಸಚಿವ ಸಂಪುಟದ ಉಪಸಮಿತಿ ನ್ಯಾಯಯುತವಾಗಿ ಮೀಸಲಾತಿ ಹಂಚಿಕೆ ಮಾಡಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಆ ವ್ಯವಸ್ಥೆಯನ್ನು ಹಾಳುಮಾಡಿದ್ದು, ತಕ್ಷಣ ಮರುಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.
ಹೂವಿನಹಡಗಲಿ ಶಾಸಕ ಪ್ರಭು ಚವ್ಹಾಣ ಮಾತನಾಡಿ, ಒಳಮೀಸಲಾತಿಯಿಂದ ಬಂಜಾರ ಸಮಾಜದ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ವಸತಿ ನಿಲಯಗಳ ಪ್ರವೇಶದಲ್ಲಿ ಅನ್ಯಾಯವಾಗುತ್ತಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಬಸ್-ರೈಲು ತಡೆ ಹಾಗೂ ಮುಖ್ಯಮಂತ್ರಿ ಮತ್ತು ಸಚಿವರ ಮುತ್ತಿಗೆ ಸೇರಿದಂತೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಬಂಜಾರ ಸಮಾಜವನ್ನು ಪರಿಶಿಷ್ಟ ಜಾತಿ ಮೀಸಲಾತಿಯಿಂದ ಬಿಜೆಪಿ ಹೊರಗಿಡಲಿದೆ ಎಂದು ಕಾಂಗ್ರೆಸ್ ಸುಳ್ಳು ಪ್ರಚಾರ ನಡೆಸಿತ್ತು. ಆದರೆ ಈಗ ಅದೇ ಕಾಂಗ್ರೆಸ್ ಸರ್ಕಾರ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು. ನಾಗಮೋಹನ್ ದಾಸ್ ವರದಿಯಡಿ ಮೀಸಲಾತಿ ಹಂಚಿಕೆಯಿಂದ ಬಂಜಾರ ಸೇರಿದಂತೆ ಹಲವು ಸಮುದಾಯಗಳಿಗೆ ಹಿನ್ನಡೆಯಾಗಿದ್ದು, ಮುಂಬರುವ ಜಂಟಿ ಅಧಿವೇಶನದಲ್ಲಿ ಈ ಲೋಪ ಸರಿಪಡಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಅನಿವಾರ್ಯ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಹೂವಿನಹಡಗಲಿ ಶಾಸಕ ಕೃಷ್ಣ ನಾಯಕ, ಭೀಮಸಿಂಗ್ ರಾಥೋಡ್, ಬಸವರಾಜ ನಾಯಕ, ಮಣಿಕಂಠ ರಾಥೋಡ್, ಎಸ್.ಪಿ. ಲಿಂಬ್ಯನಾಯಕ್, ಮಂಜಾನಾಯಕ್ ಹಾಗೂ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಉಪಸ್ಥಿತರಿದ್ದರು.
“ನಾಗಮೋಹನ್ ದಾಸ್ ವರದಿಯಡಿ ಮೀಸಲಾತಿ ಹಂಚಿಕೆಯಿಂದ ಬಂಜಾರ ಸೇರಿದಂತೆ ಹಲವು ಸಮುದಾಯಗಳಿಗೆ ಹಿನ್ನಡೆಯಾಗಿದೆ. ಮುಂಬರುವ ಜಂಟಿ ಅಧಿವೇಶನದಲ್ಲಿ ಈ ಲೋಪ ಸರಿಪಡಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಅನಿವಾರ್ಯ.”
– ಡಾ. ಚಂದ್ರು ಲಮಾಣಿ, ಶಾಸಕ



