ವಿಜಯಸಾಕ್ಷಿ ಸುದ್ದಿ, ಗದಗ: ಜಲಶಕ್ತಿ ಅಭಿಯಾನದ ಮಹತ್ವದ ಭಾಗವಾಗಿರುವ ‘ಜಲಸಂಚಾಯಿ ಜನಭಾಗಿದಾರಿ 1.0’ ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯು ಐತಿಹಾಸಿಕ ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದೆ. ಜಲ ಸಂರಕ್ಷಣೆ ಕಾಮಗಾರಿಗಳ ಅನುಷ್ಠಾನದಲ್ಲಿ ಗದಗ ಜಿಲ್ಲೆಯು ಕರ್ನಾಟಕದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ದೇಶದ 780 ಜಿಲ್ಲೆಗಳಲ್ಲಿ (ಝೋನ್ 3, ಕ್ಯಾಟಗರಿ 3ರಲ್ಲಿ) ನಾಲ್ಕನೇ ಸ್ಥಾನ ಪಡೆಯುವ ಮೂಲಕ 25 ಲಕ್ಷ ರೂಪಾಯಿಗಳ ನಗದು ಬಹುಮಾನಕ್ಕೆ ಭಾಜನವಾಗಿದೆ.
`ಪ್ರತಿ ಹನಿ ನೀರನ್ನು ಸಂರಕ್ಷಿಸಿ’ ಎಂಬ ಧ್ಯೇಯದೊಂದಿಗೆ ಜಲಸಂಚಾಯಿ ಜನಭಾಗಿದಾರಿ 1.0 ಅಭಿಯಾನವನ್ನು ಪ್ರಾರಂಭಿಸಲಾಗಿತ್ತು. ಮಳೆ ನೀರನ್ನು ಸಂಗ್ರಹಿಸುವುದು, ಜಲ ಸಂರಕ್ಷಣೆಯ ಸಂಸ್ಕೃತಿಯನ್ನು ಬೆಳೆಸುವುದು, ನೀರಿನ ಗುಣಮಟ್ಟವನ್ನು ಸುಧಾರಿಸುವುದು, ನೀರಿನ ಕೊರತೆಯ ಸವಾಲಿಗೆ ಸಮುದಾಯದ ಸಹಭಾಗಿತ್ವದೊಂದಿಗೆ ಸಮರ್ಥ ಪರಿಹಾರವನ್ನು ಒದಗಿಸುವುದು ಈ ಕಾರ್ಯಕ್ರಮದ ಮುಖ್ಯ ಗುರಿಯಾಗಿತ್ತು.
ಈ ಹಿನ್ನೆಲೆಯಲ್ಲಿ 2024 ಏಪ್ರಿಲ್ 1ರಿಂದ 2025 ಮಾರ್ಚ್ 31ರವರೆಗಿನ ಅವಧಿಯಲ್ಲಿ ಮಹಾತ್ಮ ಗಾಂಧಿ ರಾಷ್ಟಿಕಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಸೇರಿದಂತೆ ವಿವಿಧ ಯೋಜನೆಗಳಡಿ ಬೃಹತ್ ಜಲ ಕ್ರಾಂತಿಗೆ ನಾಂದಿ ಹಾಡಿದವು. ಈ ಅವಧಿಯಲ್ಲಿ ಒಟ್ಟು 11,971 ಜಲ ಸಂರಕ್ಷಣೆ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಜಲಸಂಚಾಯಿ ಪೋರ್ಟಲ್ನಲ್ಲಿ ದಾಖಲಿಸಲಾಯಿತು.
ಮುಖ್ಯವಾಗಿ 11,329 ವೈಯಕ್ತಿಕ ಮತ್ತು ಸಮುದಾಯ ಬಂಡು ನಿರ್ಮಾಣ ಮಾಡಲಾಯಿತು. 465 ಮಳೆ ನೀರು ಕೊಯ್ಲು ಕಾಮಗಾರಿಗಳು, 75 ಬೋರವೆಲ್ ರಿಚಾರ್ಜ್, 10 ಚೆಕ್ ಡ್ಯಾಂ ನಿರ್ಮಾಣದಿಂದ ಗದಗ ಜಿಲ್ಲೆಯ ಜಲ ಸಂರಕ್ಷಣೆಯ ಚಿತ್ರಣವೇ ಬದಲಾಗಿದೆ. ಗದಗ ಜಿಲ್ಲಾ ಪಂಚಾಯಿತಿಯ ಈ ಶ್ರಮಕ್ಕೆ ಕೇಂದ್ರ ತಂಡದಿಂದ ಮನ್ನಣೆ ದೊರೆತಿದೆ. ಕೇಂದ್ರ ನೋಡಲ್ ಅಧಿಕಾರಿಗಳು 2025 ಜೂನ್ 16ರಿಂದ 21ರವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ಪರಿಶೀಲನೆ ನಡೆಸಿ, ಕಾಮಗಾರಿಗಳು ಉನ್ನತ ಮಾನದಂಡಗಳನ್ನು ಪೂರೈಸಿರುವುದನ್ನು ಖಚಿತಪಡಿಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರಶಸ್ತಿಗೆ ಕಾರಣವಾಗಿದೆ.
“ಜಲಸಂಚಾಯಿ ಜನಭಾಗಿದಾರಿ ಅಭಿಯಾನದಲ್ಲಿ ಕರ್ನಾಟಕದಲ್ಲೇ ಗದಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವುದು ಸಂತಸ ತಂದಿದೆ. ಅಂತರ್ಜಲ ಮಟ್ಟ ಹೆಚ್ಚಳ ಮತ್ತು ಪರಿಸರ ಸಂರಕ್ಷಣೆ ಕುರಿತು ಅಧಿಕಾರಿಗಳು ಶ್ರಮವಹಿಸಿ ಹಲವು ಕಾಮಗಾರಿಗಳನ್ನು ಅನುಷ್ಠಾನಗೊಳಿಸಿರುವುದು ಪ್ರಶಂಸನೀಯ. ಬರುವ ಅನುದಾನವನ್ನು ಅಭಿಯಾನದ ಉದ್ದೇಶ ಈಡೇರಿಕೆಗೆ ಬಳಸಿಕೊಳ್ಳಲು ಶ್ರಮಿಸಲಾಗುವುದು”
- ಶ್ರೀಧರ ಸಿ.ಎನ್.
ಜಿಲ್ಲಾಧಿಕಾರಿಗಳು, ಗದಗ.
“ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಹಲವು ಪರಿಸರ ಸ್ನೇಹಿ ಕಾಮಗಾರಿಗಳನ್ನು ಅನುಷ್ಠಾನ ಮಾಡಲಾಗಿದೆ. ಕೇಂದ್ರ ಅಧ್ಯಯನ ತಂಡ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಪ್ರಥಮ ಸ್ಥಾನ ದೊರೆತಿರುವುದು ನಮಗೆ ಮತ್ತಷ್ಟು ಕ್ರಿಯಾತ್ಮಕ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಪ್ರೋತ್ಸಾಹಕವಾಗಿದೆ”
- ಸಿ.ಆರ್. ಮುಂಡರಗಿ.
ಉಪಕಾರ್ಯದರ್ಶಿ, ಜಿ.ಪಂ-ಗದಗ.
“ಜಿಲ್ಲೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಅತೀ ಹೆಚ್ಚು ಕಾಮಗಾರಿಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಿಸಿರುವುದರಿಂದಲೇ ಈ ಪ್ರಶಸ್ತಿ ಬಂದಿದೆ. ಇದಕ್ಕೆ ಪೂರಕವಾಗಿ ಇನ್ನಷ್ಟು ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಮನರೇಗಾ ಯೋಜನೆಯಡಿಯಲ್ಲಿ ಕ್ರಿಯಾಯೋಜನೆ ತಯಾರಿಸಿ, ಅನುಮೋದನೆ ಪಡೆದು ಹೆಚ್ಚಿನ ಕ್ರಿಯಾತ್ಮಕ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಮೇಲಾಧಿಕಾರಿಗಳ ಸೂಚನೆಯಂತೆ ಕ್ರಮವಹಿಸಲಾಗುವುದು”
- ಕಿರಣಕುಮಾರ್ ಎಸ್.ಹೆಚ್.
ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯ ಅಧಿಕಾರಿ,
ಮನರೇಗಾ ವಿಭಾಗ, ಜಿ.ಪಂ ಗದಗ.


