ವಿಜಯಸಾಕ್ಷಿ ಸುದ್ದಿ, ಗದಗ : ಮಲಪ್ರಭಾ ಜಲಾಶಯದಿಂದ (ಮಲಪ್ರಭಾ ಬಲದಂಡೆ ಕಾಲುವೆ ಹಾಗೂ ನರಗುಂದ ಶಾಖಾ ಕಾಲುವೆಗೆ) ಮೇ 14ರಿಂದ ನೀರು ಹರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಸೂಚಿಸಿದರು.
ನಗರದ ಕೇಸ್ವಾನ್ ಸಭಾಂಗಣದಲ್ಲಿ ವಿಡಿಯೋ ಸಂವಾದದ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ಭಾಗಗಳಲ್ಲಿ ದೂರುಗಳು ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಕುಡಿಯುವ ನೀರು ಪೂರೈಕೆಯಲ್ಲಿ ದೂರುಗಳು ಕೇಳಿ ಬರದಂತೆ ಗಮನ ಹರಿಸಬೇಕು ಎಂದರು.
ಜೂನ್ ಅಂತ್ಯದವರೆಗೂ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಗಮನ ಹರಿಸಬೇಕು. ಕುಡಿಯುವ ನೀರು ಪೂರೈಕೆಗೆ ಪ್ರಥಮಾದ್ಯತೆ ನೀಡಬೇಕು ಎಂದು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಜಿ.ಪಂ ಸಿಇಓ ಎಸ್. ಭರತ್ ಮಾತನಾಡಿ, ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ಕುಡಿಯುವ ನೀರು ಸಂಬಂಧ ತುರ್ತು ಕಾಮಗಾರಿಗಳಿಗೆ ಅನುಮೋದನೆ ಪಡೆದು ಕಾರ್ಯನಿರ್ವಹಿಸಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಕದ, ಜಿ.ಪಂ ಉಪ ಕಾರ್ಯದರ್ಶಿ ಸಿ.ಬಿ. ದೇವರಮನಿ, ಜಿ.ಪಂ ಇಂಜಿನಿಯರ್ಗಳು, ತಹಸೀಲ್ದಾರರು, ತಾ.ಪಂ ಇಓಗಳು, ಪುರಸಭೆ ಹಾಗೂ ಪ.ಪಂ ಮುಖ್ಯಾಧಿಕಾರಿಗಳು ಕುಡಿಯುವ ನೀರು ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ದೂರುಗಳು ಕೇಳಿಬರುತ್ತಿದ್ದು, ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು. ಅಧಿಕಾರಿಗಳು ಎಚ್ಚೆತ್ತ್ತು ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಕುಡಿಯುವ ನೀರು ಪೂರೈಕೆಗೆ ಜಿಲ್ಲಾಡಳಿತದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅಧಿಕಾರಿಗಳು ಸ್ಪಂದಿಸುವ ಕೆಲಸ ಮಾಡಬೇಕು ಎಂದು ಹೇಳಿದರು.