ಮಂಡ್ಯ: ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ, ಅಗತ್ಯವಿದ್ದರೆ ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ರಾಜ್ಯ ಸರ್ಕಾರ ಹೇಳಿದ್ದರೂ, ಇದೀಗ ಜಲಾಶಯಗಳಿಂದ ಭಾರಿ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದಿನ 15 ದಿನಗಳ ಕಾಲ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿರುವ ಬೆನ್ನಲ್ಲೇ ಕೆಆರ್ಎಸ್ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ. ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆಯಿರುವ ಸಂದರ್ಭದಲ್ಲೇ ನೀರು ಹರಿಸುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ.
ಕೆಆರ್ಎಸ್ನಿಂದ 8,121 ಕ್ಯೂಸೆಕ್ ಹೊರಹರಿವು:
ಸದ್ಯ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 106.42 ಅಡಿ ಇದ್ದು, ಸುಮಾರು 28.275 ಟಿಎಂಸಿ ನೀರು ಸಂಗ್ರಹವಿದೆ. ಜಲಾಶಯಕ್ಕೆ ಒಳಹರಿವು 2,304 ಕ್ಯೂಸೆಕ್ ಇದೆ. ಆದರೆ ಹೊರಹರಿವು 8,121 ಕ್ಯೂಸೆಕ್ನಷ್ಟಿದೆ.
ಒಳಹರಿವಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿರುವುದರಿಂದ ಜಲಾಶಯದ ನೀರಿನ ಮಟ್ಟದ ಬಗ್ಗೆ ರೈತರಲ್ಲಿ ಆತಂಕ ಹೆಚ್ಚಾಗಿದೆ.
ಹಾರಂಗಿಯಿಂದಲೂ ನೀರು ಬಿಡುಗಡೆ:
ಕೊಡಗಿನ ಹಾರಂಗಿ ಜಲಾಶಯದಿಂದಲೂ ನೀರು ಹೊರಬಿಡಲಾಗುತ್ತಿದೆ. ಜಲಾಶಯದ ನಾಲ್ಕು ಕ್ರೆಸ್ಟ್ ಗೇಟ್ಗಳ ಮೂಲಕ ಸುಮಾರು 3,000 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.
ಕೊಡಗಿನಲ್ಲಿ ಕಳೆದ ಒಂದು ವಾರದಿಂದ ಮಳೆಯಿಲ್ಲದ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವು 1,324 ಕ್ಯೂಸೆಕ್ಗೆ ಇಳಿಕೆಯಾಗಿದೆ. ಜಲಾಶಯದ ನೀರಿನ ಮಟ್ಟವೂ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನೀರು ಬಿಡುಗಡೆ ವಿಚಾರ ಗಮನ ಸೆಳೆದಿದೆ.
ಮೈಸೂರಿನಲ್ಲಿ ವಿನೂತನ ಪ್ರತಿಭಟನೆ:
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶ ಹಾಗೂ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು.
ಮೈಸೂರಿನ ಕಾಡಾ ಕಚೇರಿ ಎದುರು ತಲೆ ಮೇಲೆ ಚಪ್ಪಡಿ ಕಲ್ಲುಗಳನ್ನು ಹೊತ್ತು ಪ್ರತಿಭಟಿಸಿದ ಹೋರಾಟಗಾರರು, ‘ಕಾವೇರಿ ನಮ್ಮದು, ನಮಗೆ ನ್ಯಾಯ ಬೇಕು’ ಎಂದು ಘೋಷಣೆ ಕೂಗಿದರು.
ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಹಾಗೂ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯನ್ನು ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.



