ವಿಜಯಸಾಕ್ಷಿ ಸುದ್ದಿ, ಹಾವೇರಿ: ಕಂದಾಯ ಇಲಾಖೆಯಿಂದ 2ನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ. ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸರ್ಕರದ ಸಹಸ್ರ ದಿನಾಚರಣೆ ಮತ್ತು ಒಂದು ಲಕ್ಷ ಮಂದಿ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಸರ್ಕಾರದಲ್ಲಿ ಕ್ರಾಂತಿಕಾರಿ ಪ್ರಗತಿ ಆಗಿದೆ. ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ. ಒಟ್ಟು ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ. ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಗಿದೆ. ನಾವು ಕೊಟ್ಟ ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. ಅಧಿಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎನ್ನುವ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ. ಇಲ್ಲಿಯವರೆಗೂ ಗ್ಯಾರಂಟಿಗಳ ಮೂಲಕ 1,18,000 ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಖಾತೆಗೆ ಹಾಕಿದ್ದೇವೆ ಎಂದರು.
ಈ ಸಾವಿರ ದಿನಗಳಲ್ಲಿ ನಮ್ಮ ಸಾಧನಾ ಸಮಾವೇಶ ನಮ್ಮ ಬದ್ಧತೆಯಾಗಿದೆ. ಬಡವರು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಪುನರುಚ್ಛರಿಸಿದರು.
ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಕಾರ್ಯಕ್ರಮದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿದ ಅಧಿಕಾರಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಶಿವಾನಂದ ಪಾಟೀಲ್, ಹೆಚ್.ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹಾಗೂ 20ಕ್ಕೂ ಹೆಚ್ಚು ಮಂದಿ ಶಾಸಕರು, ಮುಖಂಡರು, ನಾಯಕರು ಉಪಸ್ಥಿತರಿದ್ದರು.
ಎಲ್ಲ ಜಾತಿ, ಧರ್ಮ, ಭಾಷೆಯ ಜನರಿಗೆ ಸೇರಿದಂತಹ ಎಲ್ಲರನ್ನೊಳಗೊಂಡ ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರ ನಂಬಿಕೆಯಿರಿಸಿದೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ. ಬಿಜೆಪಿಯವರು 4 ವರ್ಷ ಏನೂ ಮಾಡಿಲ್ಲ. ಬಿಜೆಪಿಯವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.



