ಬೆಳಗಾವಿ: ಸಂವಿಧಾನ ಮತ್ತು ಜನರಿಗಾಗಿ ನಮ್ಮ ಜೀವ ತ್ಯಾಗ ಮಾಡಲು ಸಿದ್ಧರಿದ್ದೇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಬೆಳಗಾವಿ ಸಿಪಿಇಡ್ ಮೈದಾನದಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿ ನೆನಪಿಗಾಗಿ ಆಯೋಜಿಸಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಪಾಲ್ಗೊಂಡು ಅವರು ಕನ್ನಡದಲ್ಲಿ ಭಾಷಣ ಆರಂಭಿಸಿ ಗಮನ ಸೆಳೆದ ಅವರು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಅನಾರೋಗ್ಯದಿಂದ ನಮ್ಮ ಅಣ್ಣ ರಾಹುಲ್ ಗಾಂಧಿ ಅವರು ಸಮಾವೇಶಕ್ಕೆ ಬರಲು ಆಗಿಲ್ಲ. ದೇಶಕ್ಕಾಗಿ ರಾಹುಲ್ ಗಾಂಧಿ ಪ್ರತಿಕ್ಷಣ ಹೋರಾಡುತ್ತಿದ್ದಾರೆ. ರಾಹುಲ್ ಸಂವಿಧಾನದ ಪರವಾಗಿ ಆಡುವ ಮಾತನ್ನು ತಡೆಯುತ್ತಿದ್ದಾರೆ. ಅಧಿಕಾರದಲ್ಲಿರುವ ಬಿಜೆಪಿಗೆ ರಾಹುಲ್ ಬಗ್ಗೆ ಭಯವಿದೆ. ರಾಹುಲ್ ಸತ್ಯದ ಪರವಾಗಿ ಹೋರಾಡುತ್ತಿದ್ದಾರೆ. ಹಾಗಾಗಿ, ರಾಹುಲ್ ಗಾಂಧಿ ಅವರನ್ನು ನೋಡಿದರೆ ಬಿಜೆಪಿಗರು ಹೆದರುತ್ತಾರೆ.
ಅವರ ವಿರುದ್ಧ ನೂರಾರು ಕೇಸ್ ಹಾಕಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಸೇರಿ ಎಲ್ಲ ನಾಯಕರು ಮತ್ತು ನಾನು ಕೂಡ ಹೆದರಲ್ಲ. ಯಾಕೆಂದರೆ ಸತ್ಯ ನಿಷ್ಠೆ ಮೇಲೆ ನಾವು ಹೋರಾಡುತ್ತಿದ್ದೇವೆ. ಸಂವಿಧಾನವೇ ನಮ್ಮ ಸಿದ್ಧಾಂತ. ಸಮಾನತೆ, ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಜನರಿಗಾಗಿ ನಮ್ಮ ಜೀವ ತ್ಯಾಗ ಮಾಡಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.