ಭದ್ರಾ ಮೇಲ್ದಂಡೆ ಯೋಜನೆಗೆ ಪರಿಷ್ಕೃತ ಅನುದಾನ ಕೇಳಿದ್ದೇವೆ: ಡಿ.ಕೆ.ಶಿವಕುಮಾರ್

0
Spread the love

ನವದೆಹಲಿ: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25 ರಷ್ಟು ಆರ್ಥಿಕ ಸಹಾಯ, ಕಳಸಾ ಬಂಡೂರಿ ಯೋಜನೆ, ಕೃಷ್ಣಾ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

Advertisement

ನವದೆಹಲಿಯ ಕರ್ನಾಟಕ ಭನವದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿ ನಡೆಸಿ ದೆಹಲಿ ಪ್ರವಾಸ ಹಾಗೂ ಕೇಂದ್ರ ಸಚಿವರ ಭೇಟಿ ವಿಚಾರವಾಗಿ ಮಾಹಿತಿ ನೀಡಿದರು. ಆರು ನೀರಾವರಿ ಯೋಜನೆಗಳಾದ ಸೊನ್ನತಿ ಏತ ನೀರಾವರಿ ಯೋಜನೆಗೆ ₹ 804.66 ಕೋಟಿ, ಯುಕೆಪಿಯ ಇಂಡಿ ಶಾಖಾ ಕಾಲುವೆಗೆ ₹2,666.70 ಕೋಟಿ,

ಮಲಪ್ರಭಾ ಕಾಲುವೆ ಮೂರನೇ ಹಂತಕ್ಕೆ ₹3000 ಕೋಟಿ, ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ನಾಲೆಗೆ ₹1,444.42 ಕೋಟಿ, ಬೆಣ್ಣೆಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ₹1,610 ಕೋಟಿ ಸೇರಿದಂತೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಇದರಲ್ಲಿ ಒಂದಕ್ಕೆ ಅನುದಾನ ನೀಡಲಾಗಿದೆ ಎಂಬ ಮಾಹಿತಿ ಬಂದಿದೆ. ಆದರೆ ನಮಗೆ ಇನ್ನು ಅಧಿಕೃತವಾಗಿ ತಿಳಿಸಿಲ್ಲ” ಎಂದು ತಿಳಿಸಿದರು.

“ಎತ್ತಿನಹೊಳೆ ಯೋಜನೆಯನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಎಂದು ಅನುಮೋದಿಸಿ ಶೇ.25 ರಷ್ಟು ಆರ್ಥಿಕ ಸಹಾಯ ನೀಡಬೇಕಾಗಿ ಮನವಿ ಮಾಡಿದ್ದೇನೆ. ಈ ಯೋಜನೆ ಕಾಮಗಾರಿಯನ್ನು ತುಮಕೂರು ಹಾಗೂ ಹಾಸನ ಭಾಗದಲ್ಲಿ ನಿಲ್ಲಿಸಲಾಗಿತ್ತು. ಯೋಜನೆ ಹಾದು ಹೋಗುವ ಕಡೆ ಕಂದಾಯ ಭೂಮಿ ಹೊಂದಿದ್ದ ರೈತರಿಗೆ ಪೋಡಿ ವಿತರಣೆ ಮಾಡಿ ಪರಿಹಾರವನ್ನೂ ನೀಡಲಾಗಿತ್ತು” ಎಂದರು.

“ಆದರೆ ತದ ನಂತರ ಅರಣ್ಯ ಇಲಾಖೆಯವರು ಇದು ನಮ್ಮ ಭೂಮಿ ಎಂದು ತಕರಾರು ತೆಗೆದರು. ಅವರ ಬಳಿ ಸಂಘರ್ಷ ಬೇಡ ಎಂದು ಬದಲಿ ಭೂಮಿ ನೀಡಿದ್ದೇವೆ. ಇದಕ್ಕೆ ಅರಣ್ಯ ಇಲಾಖೆಯವರು ಕ್ಲಿಯರೆನ್ಸ್ ಪ್ರಮಾಣ ಪತ್ರ ನೀಡಬೇಕಿತ್ತು, ಆದರೆ ಮಾಡಿಲ್ಲ. ಕೆಲವು ತಕರಾರುಗಳನು ಹಾಕಿದ್ದಾರೆ. ಈಗಾಗಲೇ ಕೇಂದ್ರ ಸಚಿವರನ್ನು ಮೂರು ಬಾರಿ ಭೇಟಿ ಮಾಡಲಾಗಿತ್ತು ಆದರೂ ಇದಕ್ಕೆ ಒಪ್ಪಿಗೆ ಸಿಕ್ಕಿಲ್ಲ. ಕಾಲುವೆ ತೆಗೆದಾಗ ಬರುವ ಮಣ್ಣನ್ನು ಇಲ್ಲಿಯೇ ಹಾಕಲಾಗುತ್ತಿದೆ. ಬದಲಾಗಿ 25 ಕಿಲೋ ಮೀಟರ್ ದೂರ ಹಾಕಿ ಎಂಬುದು ಅವರ ಪ್ರಮುಖ ತಕರಾರು. ಕೇಂದ್ರ ಸಚಿವರು ಸದ್ಯದಲ್ಲೇ ಇದನ್ನು ಬಗೆಹರಿಸುವುದಾಗಿ ತಿಳಿಸಿದ್ದಾರೆ” ಎಂದರು.


Spread the love

LEAVE A REPLY

Please enter your comment!
Please enter your name here