ಸ್ಲಂ ಜನರ ಹಕ್ಕೊತ್ತಾಯಗಳಿಗೆ ಸ್ಪಂದಿಸುತ್ತೇವೆ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು/ಗದಗ: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ಸಂವಿಧಾನ ವಿರೋಧಿ ವಸತಿ ಇಲಾಖೆ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಆಗ್ರಹಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

Advertisement

2025-26ನೇ ಸಾಲಿನ ಬಜೆಟ್‌ನಲ್ಲಿ ಸ್ಲಂ ಜನರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಪಾಲು ನೀಡಬೇಕು, 2023ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿರುವ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಬೇಕು. ಸ್ಲಂ ಜನರಿಗೆ ಪ್ರತ್ಯೇಕ ಸಚಿವಾಲಯ ಮತ್ತು ನಗರ ಉದ್ಯೋಗ ಖಾತ್ರಿ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕು. ರಾಜ್ಯದ ನಿವೇಶನರಹಿತರಿಗೆ ವಸತಿ ಕಲ್ಪಿಸುವ ಲ್ಯಾಂಡ್ ಬ್ಯಾಂಕ್ ಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಈಡೇರಿಕೆಗೆ ಫ್ರೀಡಂ ಪಾರ್ಕ್ನಲ್ಲಿ ಸ್ಲಂ ಜನರ ಬೃಹತ್ ಪ್ರತಿಭಟನೆಯನ್ನು ನಡೆಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸರ್ಕಾರದ ಪರವಾಗಿ ಮನವಿ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯ, ಇಂದು ಮುಖ್ಯಮಂತ್ರಿಗಳು ಮತ್ತು ವಸತಿ ಸಚಿವರ ಸಮ್ಮುಖದಲ್ಲಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಸ್ಲಂ ನಿವಾಸಿಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡಲು ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿಗಳು ಸಕರಾತ್ಮಕವಾಗಿ ಸ್ಪಂದಿಸಿ ಕೊಳಚೆ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು 500 ಕೋಟಿ ಅನುದಾನ ನೀಡಲು ಸಮ್ಮತಿಸಿದ್ದಾರೆ. ರಾಜ್ಯದಲ್ಲಿಯ ಖಾಸಗಿ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ಸುತ್ತೋಲೆಯನ್ನು ಈ ಅಧಿವೇಶನದಲ್ಲಿ ವಾಪಸ್ ಪಡೆಯಲು ಸಿದ್ಧತೆ ಮಾಡಲಾಗಿದೆ. ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಅಗತ್ಯವಿದ್ದು, ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸ್ಲಂ ಜನರ ಹಕ್ಕೊತ್ತಾಯಗಳಿಗೆ ಸ್ಪಂದಿಸಲಾಗುವುದೆಂದು ಭರವಸೆ ನೀಡಿದರು.

ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ, ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ, ಸ್ಲಂ ಜನಾಂದೋಲನ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಜನಾರ್ಧನ ಹಳ್ಳಿಬೆಂಚಿ, ಸಾವಿತ್ರಿಬಾ ಫುಲೆ ಸಂಘಟನೆಯ ಸಂಚಾಲಕಿ ಚಂದ್ರಮ್ಮ, ರಾಜ್ಯ ಸಮಿತಿ ಮುಖಂಡರಾದ ಶೋಭಾ ಕಮತರ, ವೆಂಕಮ್ಮ, ರೇಣುಕಾ ಸರಡಗಿ, ಸುಧಾ, ಶೇಖರಬಾಬು, ಅರುಣ, ರೇಣುಕಾ ಯಲ್ಲಮ್ಮ, ತೇಜಸಕುಮಾರ, ಗದಗ ಜಿಲ್ಲಾ ಸ್ಲಂ ಸಮಿತಿ ಮುಖಂಡರಾದ ಮೆಹಬೂಬಸಾಬ ಬಳ್ಳಾರಿ, ಅಕ್ಬರಸಾಬ ಡಂಬಳ, ಮೌಲಾಸಾಬ ಗಚ್ಚಿ, ಮಂಜುನಾಥ ಶ್ರೀಗಿರಿ, ಖಾಜಾಸಾಬ ಇಸ್ಮಾಯಿಲನವರ, ಸಲೀಮ ಹರಿಹರ, ಶಂಕ್ರಪ್ಪ ಮುಂಡರಗಿ, ದುರ್ಗಪ್ಪ ಮಣ್ಣವಡರ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಸ್ಲಂ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಭೂಮಿ, ವಸತಿ, ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿದೀಪ, ಶೌಚಾಲಯ ಇತ್ಯಾದಿ ಕನಿಷ್ಠ ಸೌಲಭ್ಯಗಳನ್ನು ನೀಡದೆ ಅಭಿವೃದ್ಧಿಯಿಂದ ಸ್ಲಂ ಜನರನ್ನು ವಂಚಿಸುವ ಮೂಲಕ ಸಂವಿಧಾನದ ಖಾತ್ರಿಗಳನ್ನು ದೊರಕದಂತೆ ಮಾಡಲಾಗಿದೆ. ಹಾಗಾಗಿ ಸಂವಿಧಾನದ ಸಾಮಾಜಿಕ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕ ಸರ್ಕಾರ ರಾಜ್ಯದ ಸ್ಲಂ ಜನರ ಪರವಾದ ಯೊಜನೆಗಳನ್ನು ಜಾರಿಗೆ ತಂದು ಅನುದಾನ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.


Spread the love

LEAVE A REPLY

Please enter your comment!
Please enter your name here