ವಿಜಯಸಾಕ್ಷಿ ಸುದ್ದಿ, ಗದಗ: ಮಲ್ಲಕಂಬ ಭಾರತದ ಪ್ರಾಚೀನ ಕ್ರೀಡೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ವಿಶೇಷ ಮಹತ್ವ ಪಡೆದುಕೊಳ್ಳುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆ ಗದಗ ಜಿಲ್ಲೆಯಲ್ಲಿ ನಡೆಯುತ್ತಿರುವುದು ಸಂತೋಷದ ವಿಷಯ. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಸಿಬ್ಬಂದಿ ಇಲ್ಲಿಗೆ ಬಂದಿರುವ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಅನುಕೂಲ ಮಾಡಿಕೊಡುವ ಮೂಲಕ ಕ್ರೀಡಾಕೂಟದ ಯಶಸ್ಸಿಗೆ ನೆರವಾಗಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಗದಗ ಜಿಲ್ಲೆ ಕ್ರೀಡೆ, ಸಂಗೀತ ಹಾಗೂ ಸಹಕಾರ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದೆ. ಇಲ್ಲಿನ ಕ್ರೀಡಾಪಟುಗಳು ಹಾಕಿ, ಸೈಕ್ಲಿಂಗ್ ಹಾಗೂ ಕುಸ್ತಿ ಸ್ಪರ್ಧೆಯಲ್ಲಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ತರುವ ಮೂಲಕ ಜಿಲ್ಲೆಯ ಕೀರ್ತಿಯನ್ನು ದೇಶದುದ್ದಕ್ಕೂ ಪಸರಿಸಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆದ ನಂತರ ಕ್ರೀಡೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಖೇಲೋ ಇಂಡಿಯಾ ಸ್ಥಾಪಿಸಿ, ಅದಕ್ಕೆ ಮಲ್ಲಕಂಬವನ್ನೂ ಜೋಡಿಸಲಾಗಿದೆ. ಆದರೂ, ನಮ್ಮ ದೇಶದಲ್ಲಿ ಕ್ರಿಕೆಟ್, ಫುಟ್ಬಾಲ್ಗಿಂತ ಬೇರೆ ಯಾವುದೇ ಕ್ರೀಡೆ ಮುನ್ನಲೆಗೆ ಬರದಿರುವುದು ಬೇಸರದ ವಿಷಯ ಎಂದರು.
ರಾಜ್ಯದಲ್ಲಿ 35 ಶೈಕ್ಷಣಿಕ ಜಿಲ್ಲೆಗಳಿದ್ದು, ಮಲ್ಲಕಂಬ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ 20 ಜಿಲ್ಲೆಯ ಕ್ರೀಡಾಪಟುಗಳು ಮಾತ್ರ ಭಾಗವಹಿಸಿದ್ದಾರೆ. ಅಂದರೆ, ಈ ಕ್ರೀಡೆ ಎಲ್ಲೆಡೆ ಪ್ರಚಲಿತವಿಲ್ಲ. ಹಾಗಾಗಿ, ಇದನ್ನು ಜನಪ್ರಿಯಗೊಳಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಸರ್ಕಾರ ಎಲ್ಲ ಹಂತದ ಶಾಲಾ-ಕಾಲೇಜುಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರ ನೇಮಕ ಮಾಡಲು ಕ್ರಮವಹಿಸಬೇಕು ಎಂದರು.
ಡಿಡಿಪಿಐ ಆರ್.ಎಸ್. ಬುರಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಎ. ಯರಗುಡಿ ನಿರೂಪಿಸಿದರು. ಬಿಇಒ ವಿ.ವಿ. ನಡುವಿನಮನಿ ವಂದಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಬಳ್ಳಾರಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಫ್. ಪೂಜಾರ, ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಎಂ.ಕೆ. ಲಮಾಣಿ, ಶಿವಪ್ಪ ಕೊಡ್ಲಿ, ಪ್ರಕಾಶ ಮ್ಯಾಗೇರಿ, ಸಿ.ಕೆ. ಚೆನ್ನಾಳ, ಶರಣು ಗೊಗೇರಿ, ಎಸ್.ಎನ್. ಬಳ್ಳಾರಿ ಇದ್ದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಮಲ್ಲಕಂಬ ಒಂದು ರೋಮಾಂಚನಕಾರಿ ಕ್ರೀಡೆ. ದೈಹಿಕ ಮತ್ತು ಮಾನಸಿಕ ಸಮತೋಲನದಿಂದ ಕೂಡಿರುವ ಈ ಕ್ರೀಡೆಯನ್ನು ಅಭ್ಯಾಸ ಮಾಡುವುದರಿಂದ ಮಕ್ಕಳಲ್ಲಿ ಆತ್ಮಸ್ಥೈರ್ಯ ಮೂಡುತ್ತದೆ. ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆಯಲ್ಲಿ 20 ಜಿಲ್ಲೆಗಳ 310 ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಎಲ್ಲರೂ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು ಎಂದರು.



