ಬೆಂಗಳೂರು: ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ಮಠಗಳನ್ನು ಕಾಪಾಡಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಆದಿಚುಂಚನಗಿರಿ ಮಠದ ಆವರಣದಲ್ಲಿ ಶ್ರೀ ಅಭಯ ಆಂಜನೇಯ ಸ್ವಾಮಿ, ಶ್ರೀ ಪ್ರಸನ್ನ ಮಹಾಗಣಪತಿ ಮತ್ತು ಶ್ರೀ ಮಾತಾ ಲಲಿತಾಂಬಿಕಾ ದೇವಾಲಯದ ಕುಂಭಾಭಿಷೇಕ ಮಹೋತ್ಸವ ಮತ್ತು ಲೋಕಾರ್ಪಣಾ ಸಮಾರಂಭ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು.
“ದೇವರು ವರ ಹಾಗೂ ಶಾಪ ಎರಡನನ್ನೂ ನೀಡುವುದಿಲ್ಲ. ಕೇವಲ ಅವಕಾಶ ನೀಡುತ್ತಾನೆ. ನಿಮಗೆ ಸಿಗುವ ಅವಕಾಶದಲ್ಲಿ ನೀವು ಏನು ಮಾಡುತ್ತೀರಿ ಎಂಬುದು ಬಹಳ ಮುಖ್ಯ. ನಮ್ಮ ಹಿರಿಯರು ಮನೆ ಹುಷಾರು, ಮಠ ಹುಷಾರು ಎಂದು ಹೇಳಿದ್ದಾರೆ. ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ಮಠಗಳನ್ನು ಕಾಪಾಡಿಕೊಳ್ಳಬೇಕು. ನಾವು ನಮ್ಮ ಶಕ್ತಿಗೆ ಅನುಸಾರ ನಾವು ಮಠಗಳಿಗೆ ದಾನ ಮಾಡಬೇಕು. ಮನುಷ್ಯನ ಆಸೆಗೆ ಕೊನೆಯಿಲ್ಲ. ನಾವು ನಮ್ಮ ಆಸೆಗಳನ್ನು ಬದಿಗಿಟ್ಟು ಕೈಲಾದಷ್ಟು ದಾನ ಮಾಡಬೇಕು” ಎಂದರು.
ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ, ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಬಹಳ ಮುಖ್ಯ. ನೀವು ನಿಮ್ಮ ಬದುಕಿನಲ್ಲಿ ಸಮಾಜಕ್ಕೆ ದಾನ ಧರ್ಮ ಮಾಡುವ ಕೆಲಸ ಮಾಡಬೇಕು. ಪರೋಪಕಾರಾಯ ಫಲಂತಿ ವೃಕ್ಷಾಃ ಪರೋಪಕಾರಾಯ ವಹಂತಿ ನದ್ಯಃ, ಪರೋಪಕಾರಾಯ ದುಹಂತಿ ಗಾವಃ ಪರೋಪಕಾರಾರ್ಥಮ್ ಇದಂ ಶರೀರಮ್ ಎಂಬ ಶ್ಲೋಕವಿದೆ.
ಅಂದರೆ ಮರ, ನದಿ, ಹಸು ಎಲ್ಲವೂ ಪರರ ಉಪಕಾರಕ್ಕಾಗಿ ಇವೆ. ಅದೇ ರೀತಿ ನಮ್ಮ ದೇಹ ಕೂಡ ಪರೋಪಕಾರಕ್ಕೆ ಸೀಮಿತವಾಗಬೇಕು ಎಂಬುದು ಈ ಶ್ಲೋಕದ ಅರ್ಥ. ನೀವು ಶುದ್ಧ ಮನಸ್ಸಿನಿಂದ ಮಠ, ದೇವಾಲಯಗಳಿಗೆ ನಿಮ್ಮ ಕೈಲಾದಷ್ಟು ದಾನ ಮಾಡಿದರೆ ನಿಮ್ಮ ಮನಸ್ಸಿಗೆ ಶಾಂತಿ ಸಿಗುತ್ತದೆ” ಎಂದು ತಿಳಿಸಿದರು.