ಬೆಂಗಳೂರು: ಡ್ರಗ್ಸ್ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡ್ರಗ್ಸ್ ಹಾವಳಿ ತಡೆಗಟ್ಟಲು ಗೃಹ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು, ಐಟಿಬಿಟಿ ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವರು ಜೊತೆ ಸಭೆ ನಡೆಸಿದೆ. ಸಭೆಯಲ್ಲಿ ಬೆಂಗಳೂರಿನ ಪೊಲೀಸ್ ಆಯುಕ್ತರು, ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ತಿಳಿಸಿದರು.
ಡ್ರಗ್ಸ್ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು ಮಾಡುತ್ತೇವೆ. ಡ್ರಗ್ಸ್ ಕೇಸ್ನಲ್ಲಿ ಬಂಧನಕ್ಕೊಳಗಾದರೆ ಜಾಮೀನು ಸಿಗದಂತೆ ಮಾಡುತ್ತೇವೆ. ಡ್ರಗ್ಸ್ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು ಶಿಕ್ಷೆ ಆಗಲಿದೆ ಎಂದು ಹೇಳಿದರು. ಡ್ರಗ್ಸ್ ಹಾವಳಿ ತಡೆಗಟ್ಟಲು ರಾಜ್ಯ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಮಿಟಿ ಇದೆ. ಇದಕ್ಕೆ ಹೆಚ್ ಸಿಜಿ ಆಸ್ಪತ್ರೆ ಕ್ಯಾನರ್ ತಜ್ಞ, ತಂಬಾಕು ನಿಯಂತ್ರಣ ಸಂಬಂಧಿತ ಉನ್ನತ ಮಟ್ಟದ ಸಮಿತಿ ಸದಸ್ಯ ಡಾ. ವಿಶಾಲ್ ರಾವ್ ಸದಸ್ಯರರಾಗಿದ್ದಾರೆ. ಇವರ ಅಭಿಪ್ರಾಯವನ್ನೂ ತೆಗೆಕೊಳ್ಳಲಾಗುತ್ತದೆ ಎಂದು ತಿಳಿಸಿದರು.