ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ (CJP) ವಿಜಯೋತ್ಸವ ಆಚರಿಸಿದೆ. ನೀಟ್-ಯುಜಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ನಡೆಸಿದ ಹೋರಾಟಕ್ಕೆ ಇದು ವಿದ್ಯಾರ್ಥಿಗಳ ಗೆಲುವು ಎಂದು ಬಣ್ಣಿಸಿರುವ ಸಿಜೆಪಿ, “ವಿದ್ಯಾರ್ಥಿಗಳ ಶಕ್ತಿ ಚಿರಾಯುವಾಗಲಿ” ಎಂಬ ಸಂದೇಶವನ್ನು ಹಂಚಿಕೊಂಡಿದೆ.
ಹೊಸದಾಗಿ ರೂಪುಗೊಂಡ ವಿಡಂಬನಾತ್ಮಕ ರಾಜಕೀಯ ಗುಂಪಾದ ಕಾಕ್ರೋಚ್ ಜನತಾ ಪಾರ್ಟಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿತ್ತು.
ಜೂನ್ ತಿಂಗಳಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದರು. ಇದೇ ವೇಳೆ ಸಿಜೆಪಿ ಹಾಗೂ ಕೇಂದ್ರ ಸರ್ಕಾರದ ನಡುವೆ ನಡೆದ ಮೂರನೇ ಸುತ್ತಿನ ಮಾತುಕತೆ ಸಂದರ್ಭದಲ್ಲಿ ಧರ್ಮೇಂದ್ರ ಪ್ರಧಾನ್ ತಮ್ಮ ರಾಜೀನಾಮೆ ಘೋಷಿಸಿದ್ದಾರೆ.
ರಾಜೀನಾಮೆ ಪತ್ರದಲ್ಲಿ ಧರ್ಮೇಂದ್ರ ಪ್ರಧಾನ್, “ಮೊದಲ ದಿನದಿಂದಲೇ ನಾನು ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಪರಿಸ್ಥಿತಿಯಿಂದ ಹಿಂದೆ ಸರಿದಿಲ್ಲ. ಪರೀಕ್ಷಾ ಮಾಫಿಯಾದಿಂದ ಯಾವುದೇ ಪ್ರತಿಭಾವಂತ ವಿದ್ಯಾರ್ಥಿಯ ಭವಿಷ್ಯ ಹಾಳಾಗಬಾರದು. ಯಾವುದೇ ವಿದ್ಯಾರ್ಥಿಗೆ ಅನ್ಯಾಯವಾಗಬಾರದು ಎಂಬುದು ನನ್ನ ದೃಢ ಸಂಕಲ್ಪವಾಗಿತ್ತು” ಎಂದು ಹೇಳಿದ್ದಾರೆ.
ಯುವಕರ ಕನಸುಗಳು, ಆಕಾಂಕ್ಷೆಗಳು ಮತ್ತು ನಿರೀಕ್ಷೆಗಳಿಗೆ ಗೌರವ ನೀಡುವುದಾಗಿ ತಿಳಿಸಿರುವ ಅವರು, “ಯುವಕರು ಕೇವಲ ಭಾರತದ ಭವಿಷ್ಯವಲ್ಲ, ಹೊಸ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾತೃಗಳು. ಕಳೆದ ಕೆಲವು ದಿನಗಳ ಘಟನೆಗಳು ವೈಯಕ್ತಿಕವಾಗಿ ನನಗೆ ನೋವು ತಂದಿವೆ. ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ” ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನೀಟ್ ಪರೀಕ್ಷೆ 2026ರ ಮೇ 3ರಂದು ನಡೆದಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಜೂನ್ 21ರಂದು ಮರುನಿಗದಿಪಡಿಸಲಾಗಿತ್ತು. ಈ ಪ್ರಕರಣದ ಬಳಿಕ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿತ್ತು.



