ಬೆಂಗಳೂರು: ನಗರದ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳೇಕಲ್ಲಹಳ್ಳಿ ಸಮೀಪ ಗಂಡನೊಬ್ಬ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಗೌರಮ್ಮ (45) ಕೊಲೆಯಾದ ಮಹಿಳೆ. ಈ ಕೃತ್ಯವನ್ನು ಆಕೆಯ ಗಂಡ ನಾಗರಾಜ್ ನಡೆಸಿರುವ ಆರೋಪ ಕೇಳಿಬಂದಿದೆ.
ಮೂಲತಃ ದಾವಣಗೆರೆ ಜಿಲ್ಲೆಯ ಜಗಳೂರು ಭಾಗದವರಾದ ಈ ದಂಪತಿ, ಜೀವನೋಪಾಯಕ್ಕಾಗಿ ಕೆಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಇಲ್ಲಿ ನಾಗರಾಜ್ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರೆ, ಗೌರಮ್ಮ ಮನೆ ಕೆಲಸ ಮಾಡಿಕೊಂಡು ಕುಟುಂಬವನ್ನು ಸಾಗಿಸುತ್ತಿದ್ದರು. ದಂಪತಿಗೆ ಮೂವರು ಮಕ್ಕಳಿದ್ದು, ಅವರು ಕ್ಯಾಟರಿಂಗ್ ಕೆಲಸದಲ್ಲಿ ತೊಡಗಿಕೊಂಡಿದ್ದರು ಎನ್ನಲಾಗಿದೆ.
ಗಂಡ-ಹೆಂಡತಿಯ ನಡುವೆ ಕೆಲಕಾಲದಿಂದಲೇ ಗಲಾಟೆಗಳು ನಡೆಯುತ್ತಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ವಿಶೇಷವಾಗಿ ನಾಗರಾಜ್ ಪ್ರತಿದಿನವೂ ಮದ್ಯಪಾನ ಮಾಡಿ ಮನೆಗೆ ಬಂದು ಜಗಳ ಮಾಡುತ್ತಿದ್ದನು ಎನ್ನಲಾಗಿದೆ. ಇದೇ ವಿಚಾರವಾಗಿ ಕುಟುಂಬದಲ್ಲಿ ಆಗಾಗ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ಹೇಳಲಾಗಿದೆ.
ನಿನ್ನೆ ರಾತ್ರಿ ಕೂಡ ನಾಗರಾಜ್ ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ಮನೆಗೆ ಬಂದಿದ್ದಾನೆ. ಈ ವೇಳೆ ಗೌರಮ್ಮ ಜೊತೆ ಮತ್ತೆ ಜಗಳ ಆರಂಭವಾಗಿದ್ದು, ಮಾತಿನ ಚಕಮಕಿ ತಾರಕಕ್ಕೇರಿದೆ. ಕೋಪೋದ್ರಿಕ್ತನಾದ ನಾಗರಾಜ್, ಗೌರಮ್ಮನ ಕತ್ತು ಕುಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆ ಬಳಿಕ ನಾಗರಾಜ್ ಸ್ಥಳದಿಂದ ಪರಾರಿಯಾಗಿದ್ದು, ಮಾಹಿತಿ ತಿಳಿದು ಮೈಕೋ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ನಾಗರಾಜ್ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.



