ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಜಲ್ಲಿಗೇರಿ ತಾಂಡಾ ಬಳಿ ಕುರಿ ಮೇಯಿಸುತ್ತಿದ್ದ ವೇಳೆ ಕುರಿಗಾಯಿಯ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ.
ಜಲ್ಲಿಗೇರಿ ತಾಂಡಾದ ನಿವಾಸಿ ಮಹಾಂತೇಶ್ ಚವ್ಹಾನ್ ಅವರು ಕಪ್ಪತ್ತಗುಡ್ಡ ಅರಣ್ಯದ ಅಂಚಿನ ಜಮೀನಿನಲ್ಲಿ ಕುರಿಗಳನ್ನು ಮೇಯಿಸುತ್ತಿದ್ದಾಗ ಕಾಡುಹಂದಿ ಏಕಾಏಕಿ ದಾಳಿ ನಡೆಸಿದೆ. ದಾಳಿಯಲ್ಲಿ ಮಹಾಂತೇಶ್ ಅವರಿಗೆ ಮೊಣಕಾಲು, ಮೊಣಕೈ ಹಾಗೂ ಮುಖ ಭಾಗದಲ್ಲಿ ಗಂಭೀರ ಗಾಯಗಳಾಗಿವೆ.
ಕಾಡುಹಂದಿಯನ್ನು ನಾಯಿಗಳು ಬೆನ್ನಟ್ಟಿದ್ದರಿಂದ ಅದು ಆತಂಕಗೊಂಡು ಕುರಿಗಾಯಿಯ ಮೇಲೆ ದಾಳಿ ನಡೆಸಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.
ಗಾಯಾಳುವನ್ನು ತಕ್ಷಣ ಶಿರಹಟ್ಟಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಶಿರಹಟ್ಟಿ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.



