ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗೂಡಲೂರಿನಲ್ಲಿ ಕಾಡಾನೆಗಳ ಹಿಂಡು ರೈತರ ಜಮೀನಿಗೆ ನುಗ್ಗಿ ಭಾರಿ ಹಾನಿ ಮಾಡಿವೆ.
ಆಹಾರ ಅರಸಿ ಬಂದ ಆನೆಗಳು ತೆಂಗಿನ ತೋಟಕ್ಕೆ ನುಗ್ಗಿ ತೆಂಗಿನ ಮರಗಳನ್ನು ಬುಡಸಮೇತ ಕಿತ್ತು ಹಾಕಿವೆ. ಎಳನೀರು ಇರುವ ತೆಂಗಿನ ಮರಗಳನ್ನು ಕಿತ್ತು, ಗೋನೆ ಸಮೇತ ಹೊತ್ತೊಯ್ದ ದೃಶ್ಯಗಳು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಕೆಲವು ಆನೆಗಳು ಎಳನೀರನ್ನು ಕಾಲಿನಿಂದ ತುಳಿದು ಕುಡಿದ ಬಳಿಕ ತೆಂಗಿನ ಮರವನ್ನು ಹೊತ್ತು ಸಾಗಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗೂಡಲೂರು ಸೇರಿದಂತೆ ಗಡಿ ಭಾಗಗಳಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿದ್ದು, ಬಾಳೆ ಹಾಗೂ ತೆಂಗು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟದಿಂದ ಕಂಗೆಟ್ಟಿರುವ ರೈತರು ಆನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.



