ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ ಕಾರಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ.
ರವಿ ಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಸಚಿವರು ಪ್ರಶ್ನಿಸಿದ್ದಾರೆ. ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ.
ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.