ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ತಡರಾತ್ರಿ ಭಯಾನಕ ಘಟನೆಯೊಂದು ನಡೆದಿದೆ. ಗ್ರಾಮದ ಮಧ್ಯಭಾಗದ ರಸ್ತೆಯಲ್ಲಿ ವಾಮಾಚಾರ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಹೊಸ ವರ್ಷದ ಸಂಭ್ರಮದಲ್ಲಿದ್ದ ಗ್ರಾಮಸ್ಥರಲ್ಲಿ ಭೀತಿ ಮೂಡಿದೆ.
ರಸ್ತೆಯ ಮೇಲೆ ಅರಿಶಿನ, ಕುಂಕುಮ, ನಿಂಬೆಹಣ್ಣು ಹಾಗೂ ದೀಪಗಳನ್ನು ಇಟ್ಟು ಪೂಜೆ ಮಾಡಿದಂತೆ ಕಂಡುಬಂದಿದೆ. ಈ ಕೃತ್ಯವನ್ನು ತಮಾಷೆಗೆ ಮಾಡಲಾಗಿದೆಯೇ ಅಥವಾ ಉದ್ದೇಶಪೂರ್ವಕವಾಗಿ ನಡೆಸಲಾಗಿದೆಯೇ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.
ಆದರೆ ಇಂತಹ ಘಟನೆ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ್ದು, ಹಲವರು ಗಾಬರಿಗೊಂಡಿದ್ದಾರೆ. ವಿಶೇಷವಾಗಿ ಹೊಸ ವರ್ಷದ ಸಂಭ್ರಮದ ನಡುವೆ ಈ ರೀತಿಯ ಘಟನೆ ಸಂಭವಿಸಿರುವುದು ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ.
ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಗ್ರಾಮಸ್ಥರು ಪೊಲೀಸರನ್ನು ಒತ್ತಾಯಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆಹಚ್ಚಬೇಕು ಎಂಬ ಒತ್ತಾಯಿಸಿದ್ದು, ಈ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸುವ ಸಾಧ್ಯತೆ ಇದೆ.



