ವಿಜಯಸಾಕ್ಷಿ ಸುದ್ದಿ, ಗದಗ:ಈ ಹಿಂದೆ ಮಹಿಳೆಯರು ಮನೆ ಬಿಟ್ಟು ಹೊರಗೆ ಬರುವುದು ತುಂಬಾ ಕಷ್ಟವಾಗುತ್ತಿತ್ತು. ಆದರೆ ಇಂದಿನ ದಿನಮಾನದಲ್ಲಿ ಮಹಿಳೆಯರು ಪುರುಷರಷ್ಟೇ ಸರಿಸಮಾನವಾಗಿ ಮುಂದೆ ಬಂದಿದ್ದಾರಲ್ಲದೆ, ಯಶಸ್ವಿ ಉದ್ಯಮಿಗಳಾಗಿದ್ದಾರೆ. ನಮ್ಮ ಸಂಸ್ಥೆಯಲ್ಲಿ ಕಳೆದ 4 ವರ್ಷಗಳಿಂದ ಮಹಿಳಾ ಘಟಕವು ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವುದು ಸಂತೋಷವನ್ನುಂಟು ಮಾಡುತ್ತಿದೆ ಎಂದು ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಸಂಶಿಮಠ ಹೇಳಿದರು.
ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ 50ನೇ ಸುವರ್ಣ ಮಹೋತ್ಸವ ವರ್ಷದ ರಜತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ದೃಷ್ಟಿಕೋನ ಕಾರ್ಯಾಗಾರ ಹಾಗೂ ತಂತ್ರಜ್ಞಾನದಲ್ಲಿ ಷೇರು ಮಾರುಕಟ್ಟೆ ಕುರಿತು ತಿಳುವಳಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಸ್ಥೆಯ ಗೌರವ ಕಾರ್ಯದರ್ಶಿ ಅಶೋಕಗೌಡ ಕೆ.ಪಾಟೀಲ ಮಾತನಾಡುತ್ತಾ, ಸಂಸ್ಥೆಯ ಮಹಿಳಾ ಘಟಕವು ಯಶಸ್ವಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಸಾಕಷ್ಟು ಮಹಿಳಾ ಉದ್ಯಮಿಗಳಿಗೆ ತಿಳುವಳಿಕೆ ನೀಡುವಂತಹ ಕಾರ್ಯಕ್ರಮವನ್ನು ಏರ್ಪಡಿಸುತ್ತಿರುವುದು ಸಂತಸದ ವಿಚಾರ. ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ 50ನೇ ವರ್ಷದ ಸುವರ್ಣ ಮಹೋತ್ಸವದ ವರ್ಷವನ್ನು ಈ ವರ್ಷ ಆಚರಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ತಮ್ಮೆಲ್ಲರ ಸಹಾಯ-ಸಹಕಾರ ಸದಾ ಸಂಸ್ಥೆಯ ಜೊತೆಗೆ ಇರಲಿ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಜಯಶ್ರೀ ತಾತನಗೌಡ ಪಾಟೀಲ ಮಾತನಾಡುತ್ತಾ, ಕಳೆದ 4 ವರ್ಷಗಳ ಹಿಂದೆ ರಚನೆಯಾದ ಮಹಿಳಾ ಘಟಕವು ಮಹಿಳೆಯರಿಗೆ ಸಾಕಷ್ಟು ಮಾಹಿತಿ ನೀಡುವಂತಹ ಕಾರ್ಯವನ್ನು ಮಾಡುತ್ತಿದೆ. ಮಹಿಳಾ ಘಟಕದ ಸದಸ್ಯರು ಸಂಸ್ಥೆಯ ಘನತೆ-ಗೌರವಕ್ಕೆ ಯಾವುದೇ ರೀತಿಯಿಂದ ತೊಂದರೆಯಾಗದAತೆ ನಡೆದುಕೊಳ್ಳಬೇಕು. ಸಂಸ್ಥೆಯು ತನ್ನದೇ ಆದ ಚೌಕಟ್ಟಿನಲ್ಲಿ ಕೆಲಸ ಕಾರ್ಯಗಳನ್ನು ಮಾಡಬೇಕು. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆಯ ಕಡೆಗೆ ಹೆಚ್ಚಿನ ಒತ್ತು ನೀಡಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮಹಿಳಾ ಘಟಕದ ಅಧ್ಯಕ್ಷೆ ನಂದಾ ಚಂದ್ರು ಬಾಳಿಹಳ್ಳಿಮಠ ವಹಿಸಿದ್ದರು.
ಮಹಿಳಾ ಘಟಕದ ಉಪಾಧ್ಯಕ್ಷರಾದ ಸುಷ್ಮಾ ಎಸ್.ಜಾಲಿ ಸ್ವಾಗತಿಸಿದರು. ಮಹಿಳಾ ಘಟಕದ ಗೌರವ ಕಾರ್ಯದರ್ಶಿಗಳಾದ ಜ್ಯೋತಿ ಆರ್.ದಾನಪ್ಪಗೌಡ್ರ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಘಟಕದ ಮಾಜಿ ಅಧ್ಯಕ್ಷರಾದ ಸುವರ್ಣಾ ಎಸ್.ಮದರಿಮಠ ವಂದಿಸಿದರು.
ಅತಿಥಿ ಉಪನ್ಯಾಸಕರಾಗಿ ಆಗಮಿಸಿದ ಸುಜಯ ಉಮೇಶ ಹುಬ್ಬಳ್ಳಿ ಮಾತನಾಡುತ್ತಾ, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಬೇಕಾದಲ್ಲಿ ಸಾಕಷ್ಟು ಜ್ಞಾನವನ್ನು ಪಡೆದುಕೊಳ್ಳಬೇಕಾಗುತ್ತದೆ. ಜಾಗೃತಿ ವಹಿಸಿ ಷೇರು ಮಾರುಕಟ್ಟೆಯನ್ನು ಪ್ರವೇಶ ಮಾಡಬೇಕು. ಷೇರು ಮಾರುಕಟ್ಟೆಯು ಜಗತ್ತಿನಲ್ಲಿ ಆಗುವ ಬದಲಾವಣೆಯ ಮೇಲೆ ಅವಲಂಬಿತವಾಗಿರುತ್ತದೆ. ಈ ನಿಟ್ಟಿನಲ್ಲಿ ತಾವು ಹೆಚ್ಚು ಹೆಚ್ಚು ಹಣ ತೊಡಗಿಸುವ ಬದಲಾಗಿ ಸಣ್ಣ ಪ್ರಮಾಣದಲ್ಲಿ ಹಣ ಹೂಡಿಕೆ ಮಾಡಬೇಕು ಎಂದು ತಿಳಿಸಿದರು.