ವಿಜಯಸಾಕ್ಷಿ ಸುದ್ದಿ, ವಿಜಯಪುರ: ಪ್ರತಿಯೊಬ್ಬರಿಗೂ ಜೀವನದಲ್ಲಿ ಗುರಿ ಇರಬೇಕು. ಜೀವನದಲ್ಲಿ ಗುರಿ ಇಲ್ಲದ್ದಿದ್ದರೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಮೀ ಹೆಬ್ಬಾಳಕರ್ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿರುವ ೧೯ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಇವತ್ತು ಮಹಿಳೆ ಸಾಧನೆ ಮಾಡದ ಕೇತ್ರ ಯಾವುದೂ ಉಳಿದಿಲ್ಲ. ವೈಜ್ಞಾನಿಕ, ಕ್ರೀಡೆ ಹೀಗೆ ಎಲ್ಲ ಕೇತ್ರಗಳಲ್ಲಿ ಮಹಿಳೆಯರು ಮುಂದೆ ಇದ್ದೇವೆ. ಆದರೆ ಮಹಿಳೆಯರ ಸಾಧನೆಯನ್ನು ಗುರುತಿಸುವ ಕೆಲಸಗಳಾಗುತ್ತಿಲ್ಲ. ಅದಕ್ಕೆ ತಲೆ ಕೆಡಿಸಿಕೊಳ್ಳದೇ ಸಾಧನೆ ಮಾಡುವುದರತ್ತ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಮಹಿಳಾ ವಿವಿ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ್ ಹಾಗೂ ತೊರವಿ ಗ್ರಾ.ಪಂ ಅಧ್ಯಕ್ಷೆ ಪದ್ಮಾಬಾಯಿ ರೇವಣಸಿದ್ದಪ್ಪ ನಡಗಡಿ ಅವರನ್ನು ವಿಶ್ವವಿದ್ಯಾನಿಲಯದ ಪರವಾಗಿ ಸನ್ಮಾನಿಸಲಾಯಿತು.
ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಶಾಂತಾದೇವಿ ಟಿ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಪ್ರೊ. ವಿಷ್ಣು ಶಿಂದೆ ನಿರೂಪಿಸಿದರು. ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ವಂದಿಸಿದರು.