ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕವಿವಿ ವಿದ್ಯಾರ್ಥಿ ಕಲ್ಯಾಣ ವಿಭಾಗ, ಸ್ನಾತಕೋತ್ತರ ಕ್ರೀಡಾಕೂಟ ವಿಭಾಗ, ಮಹಿಳಾ ಸಂಶೋಧನಾ ಅಧ್ಯಯನ ಕೇಂದ್ರ, ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿ ಮಹಿಳಾ ಸುರಕ್ಷತೆ ಕುರಿತಂತೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಮಹಿಳೆಯರು ಮತ್ತು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ತಂದೆ-ತಾಯಿಗಳಿಗೆ ಗೌರವ ತರುವಂತೆ ನಡೆದುಕೊಳ್ಳಬೇಕೆಂದು ತಿಳಿಸಿದರು.
ಹಿರಿಯ ಸಿವ್ಹಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಎಫ್. ದೊಡ್ಡಮನಿ ಮಾತನಾಡಿ, ಮಹಿಳೆಯರು ಮತ್ತು ವಿದ್ಯಾರ್ಥಿಗಳು ಕಾನೂನಿನಲ್ಲಿ ಇರುವ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಜಾಗೃತಿ ಹೊಂದುವುದರ ಜೊತೆಗೆ ಸಮಾಜದ ಮುಖ್ಯವಾಹಿನಿಯಲ್ಲಿ ಜಾಗರೂಕತೆಯಿಂದ ಇರಬೇಕೆಂದು ತಿಳಿಸಿದರು.
ಹುಬ್ಬಳ್ಳಿ-ಧಾರವಾಡ ಉಪಪೊಲೀಸ್ ಆಯುಕ್ತರಾದ ರವೀಶ್ ಸಿ.ಆರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ದೂರವಾಣಿ, ಮೊಬೈಲ್, ಅಂತರ್ಜಾಲವನ್ನು ಶಿಕ್ಷಣಕ್ಕಾಗಿ ಸರಿಯಾದ ರೀತಿಯಲ್ಲಿ ಸದುಪಯೋಗ ಮಾಡಿಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳಿಂದ ದೂರವಿದ್ದು, ಪುಸ್ತಕಗಳನ್ನು ಓದುವುದರಿಂದ ಜ್ಞಾನ ವಿಸ್ತಾರವಾಗಿ ಜೀವನದಲ್ಲಿ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ., ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ, ಅಧ್ಯಕ್ಷತೆ ವಹಿಸಿದ್ದ ಕವಿವಿ ಕುಲಸಚಿವ ಚನ್ನಪ್ಪ ಎ ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಸಿಬ್ಬಂದಿಗಳು, ಇಲಾಖೆಗಳ ಅಧಿಕಾರಿಗಳು, ಕವಿವಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.