ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆ ಕುರಿತು ಕಾರ್ಯಾಗಾರ ಹಾಗೂ ಶೈಕ್ಷಣಿಕ ಸಮಾವೇಶವನ್ನು ನ. 30ರಂದು ಬೆಳಗ್ಗೆ 10.30ಕ್ಕೆ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಎಂ.ಕೆ. ಲಮಾಣಿ ಮಾಹಿತಿ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ರಾಜ್ಯ ಹಾಗೂ ಜಿಲ್ಲಾ ಘಟಕ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಸಹಯೋಗದಲ್ಲಿ ಅನುದಾನಿತ, ಅನುದಾನ ರಹಿತ ಮತ್ತು ಸರಕಾರಿ ಪ್ರೌಢಶಾಲಾ ಶಿಕ್ಷಕರಿಗಾಗಿ ಈ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಮಕ್ಕಳ ಶೈಕ್ಷಣಿಕ ಉನ್ನತಿಯ ಧ್ಯೇಯ ಇಟ್ಟುಕೊಂಡು ಆರಂಭವಾದ ಸಂಘ, ಅನೇಕ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲೂ ಎಸ್ಎಸ್ಎಲ್ಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಕಳೆದ ಬಾರಿ ಜಿಲ್ಲೆಯ ಫಲಿತಾಂಶ ಕಡಿಮೆಯಾಗಿದೆ. ಹೀಗಾಗಿ ಮುಂಬರುವ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಕರನ್ನು ಮತ್ತಷ್ಟು ಸಜ್ಜುಗೊಳಿಸಲು ಈ ಕಾರ್ಯಾಗಾರ ಮತ್ತು ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಸ್. ಪಾಟೀಲ, ಬಿ.ಕೆ. ನಿಂಬನಗೌಡರ, ಜಿ.ಡಿ. ಯರಗೊಪ್ಪ, ಬೂದಪ್ಪ ಅಂಗಡಿ, ಡಿ.ಎನ್. ಮರಡ್ಡಿ, ನವೀನ ಬಸವರೆಡ್ಡಿ, ಬಿ.ಸಿ. ಗುಳೇದ, ಆರ್.ಬಿ. ಗೊಂಡಬಾಳ, ಗಿರೀಶ ನರಗುಂದ, ಉಪಸ್ಥಿತರಿದ್ದರು.



