ವಿಜಯಸಾಕ್ಷಿ ಸುದ್ದಿ, ಗದಗ : ವಿದ್ಯಾರ್ಥಿಗಳಿಗೆ ಪೋಷಕರಿಂದ ವಿದ್ಯಾಬ್ಯಾಸಕ್ಕೆ ಸಂಬಂಧಿಸಿದ ಒತ್ತಡ ಹೆಚ್ಚಿರುತ್ತದೆ. ಆ ಒತ್ತಡವನ್ನು ಧನಾತ್ಮಕವಾಗಿ ತೆಗೆದುಕೊಂಡು ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ವಿಯಾಗಿ ಒಳ್ಳೆಯ ವ್ಯಕ್ತಿತ್ವ ನಿರ್ಮಿಸಿಕೊಳ್ಳಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ನಗರದ ಆರ್ಡಿಪಿಆರ್ ವಿದ್ಯಾಲಯದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಾಕ್ರಮ ವಿಭಾಗ, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಅಬಕಾರಿ ಇಲಾಖೆ, ಜಿಲ್ಲಾ ಕಾರಾಗೃಹ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ವಿಶ್ವವಿದ್ಯಾಲಯ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ `ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಹಿಂದೆ ಸುಮಾರು 10 ವರ್ಷದ ಮುಂಚೆ ಮನೋವೈದ್ಯರ ಬಗ್ಗೆ ಜನರಲ್ಲಿ ಬೇರೆ ಭಾವನೆ ಇತ್ತು. ಇವತ್ತಿನ ದಿನದಲ್ಲಿ ಮನೋವೈದ್ಯರ ಪ್ರಾಮುಖ್ಯತೆ ಹೆಚ್ಚಾಗಿದೆ. ಇಂದಿನ ದಿನಮಾನದಲ್ಲಿ ಪ್ರತಿಯೊಬ್ಬರೂ ಹಲವಾರು ಒತ್ತಡಗಳಿಂದ ಬಳಲುತ್ತಿದ್ದಾರೆ. ಒತ್ತಡವಿಲ್ಲದವರೇ ಪುಣ್ಯವಂತರು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ಕಂಡುಬರುತ್ತಿರುವ ಕಾರಣ ಪ್ರತಿ ಶಾಲಾ-ಕಾಲೇಜುಗಳಲ್ಲಿ ಆಪ್ತ ಸಮಾಲೋಚನಾ ಕೇಂದ್ರಗಳನ್ನು ತೆರೆದು ಸೇವೆ ನೀಡಬೇಕು ಹಾಗೂ ವಿದ್ಯಾರ್ಥಿಗಳು ಆಪ್ತಸಮಾಲೋಚನೆ ಕೇಂದ್ರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿ, ಎಲ್ಲರೂ ಮಾನಸಿಕವಾಗಿ ಸದೃಡರಾಗಿ ಜೀವನದಲ್ಲಿ ಯಶಸ್ವಿಯಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಮ್ಸ್ನ ಮನೋವೈದ್ಯ ಡಾ. ಫಕೀರಪ್ಪ ಗಾಣಿಗೇರ ಉಪನ್ಯಾಸ ನೀಡಿ, ಮಾನಸಿಕ ಖಾಯಿಲೆಗಳು ಬರಲು ಕಾರಣ, ಗುರುತಿಸುವುದು ಹೇಗೆ ಹಾಗೂ ಮಾನಸಿಕವಾಗಿ ಸಧೃಡರಾಗಲು ಬೇಕಾಗುವ ಕೌಶಲ್ಯಗಳ ಕುರಿತು ಸವಿವರವಾಗಿ ತಿಳಿಸಿದರು.
ಆರ್ಡಿಪಿಆರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ ವಿ.ನಾಡಗೌಡರ ಮಾತನಾಡಿ, ದೈಹಿಕ ಆರೋಗ್ಯಕ್ಕೆ ಮಾನಸಿಕ ಆರೋಗ್ಯ ಅತ್ಯವಶ್ಯಕವಾಗಿದೆ. ಪ್ರತಿಯೊಬ್ಬರೂ ಮಾನಸಿಕವಾಗಿ ಸದೃಢರಾಗಿ, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ ಸಾಬ ಬಬರ್ಜಿ, ನಾಗಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ ಪೋಮಪ್ಪ ಪವಾರ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅನುಷ್ಠಾನ ಅಧಿಕಾರಿ ಡಾ. ರಾಜೇಂದ್ರ ಸಿ.ಬಸರಿಗಿಡದ, ತಾಲೂಕಾ ಆರೋಗ್ಯ ಅಧಿಕಾರಿ ಡಾ. ಪ್ರೀತ ಖೋನಾ, ಡಾ. ವರ್ಷಾ ಅಂಗಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಎಮ್.ಎಚ್. ಕಂಬಳಿ (ಡಿ.ವಾಯ್.ಪಿ.ಸಿ.) ಹಾಗೂ ಸಿಬ್ಬಂದಿಗಳಾದ ಗೀತಾ ಕಾಂಬಳೆ, ಪುಷ್ಪಾ ಪಾಟೀಲ, ಶ್ರೀಧರ ಎಮ್.ಸಿ., ವಿನಾಯಕ ಕಾಳಿ, ವಿನಾಯಕ ವಾಗಮೋರೆ, ಶೋಭಾ ವಡ್ಡರ, ನೂತನ ಹೊಸಮನಿ, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ವಿಶ್ವವಿದ್ಯಾಲಯದ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ ಚವ್ಹಾಣ ಸ್ವಾಗತಿಸಿದರು, ಉಪನ್ಯಾಸಕಿ ನಾಗರತ್ನ ನಾಯ್ಕ ನಿರೂಪಿಸಿದರು. ಪ್ರಾರ್ಥನೆಯನ್ನು ವಿದ್ಯಾರ್ಥಿನಿಯರಾದ ಕಾವ್ಯಾ ಮತ್ತು ದೀಪಾ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಸ್.ಎಸ್. ನೀಲಗುಂದ ರವರು ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದ ಬೆಳವಣಿಗೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ. ವಿದ್ಯಾರ್ಥಿಗಳು ಭಾವನೆಗಳನ್ನು ಸಮರ್ಪಕವಾಗಿ ನಿರ್ವಹಿಸಿದರೆ ಉತ್ತಮ ವ್ಯಕ್ತಿತ್ವ ಹೊಂದಿ ಅತ್ಯುತ್ತಮವಾದ ಜೀವನ ನಡೆಸಬಹುದು. ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಕುರಿತು ಸಮಾಜದಲ್ಲಿ ಅರಿವು ಮೂಡಿಸಿ ಎಂದು ತಿಳಿಸಿದರು.