ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಡಿ.12ರಿಂದ ಶಿರಹಟ್ಟಿಯ ತಹಸೀಲ್ದಾರ ಕಚೇರಿ ಎದುರು ಗದಗ ಜಿಲ್ಲಾ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ (ದಸ್ತು) ಪತ್ರ ಬರಹಗಾರರ ಟ್ರಸ್ಟ್ ಶಿರಹಟ್ಟಿ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿಯ ಮುಷ್ಕರ ನಡೆಸುವ ಕುರಿತು ತಹಸೀಲ್ದಾರ ರಾಘವೇಂದ್ರರಾವ್ ಕೆ ಮತ್ತು ಉಪನೊಂದಣಾಧಿಕಾರಿ ಶರಣಪ್ಪ ಪವಾರ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್ನ ಅಧ್ಯಕ್ಷ ಅಶೋಕ ಹುಬ್ಬಳ್ಳಿ, ಉಪಾಧ್ಯಕ್ಷ ಶಿವಬಸಪ್ಪ ದಶಮನಿ, ಪತ್ರ ಬರಹಗಾರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದ್ದು, ಈ ಕೂಡಲೇ ನಮ್ಮ ಬೇಡಿಕೆಗಳಾದ ಹೊರ ರಾಜ್ಯದಲ್ಲಿರುವಂತೆ ನಮ್ಮ ರಾಜ್ಯದಲ್ಲೂ ಸಹ ಪತ್ರ ಬರಹಗಾರರಿಗೆ ಪ್ರತ್ಯೇಕ ಲಾಗಿನ್ ನೀಡುವುದು, ನೋಂದಾವಣಿ ಆಗುವ ಎಲ್ಲಾ ದಸ್ತಾವೇಜುಗಳಿಗೆ ಕಡ್ಡಾಯವಾಗಿ ಪತ್ರ ಬರಹಗಾರರ ಅಥವಾ ವಕೀಲ ಬಿಕ್ಕಳಂ ಕಡ್ಡಾಯಗೊಳಿಸುವುದು, ಅನಧಿಕೃತ ವ್ಯಕ್ತಿಗಳನ್ನು ತಡೆಗಟ್ಟುವುದು ಮತ್ತು ಪತ್ರ ಬರಹಗಾರರಿಗೆ ಗುರುತಿನ ಚೀಟಿಯನ್ನು ನೀಡುವುದು, ದಸ್ತು ಬರಹಗಾರರಿಗೆ ಸೇವಾ ಭದ್ರತೆ ಒದಗಿಸುವುದು ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿ.12ರಿಂದ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ನಜೀರ ಡಂಬಳ, ಮೋಹನ ಹೊಂಬಾಳಿ, ಶಂಕರ ಕುಸ್ಲಾಪೂರ, ಬಾಬಾಜಾನ ಕೋಳಿವಾಡ, ಮೈನು ಅತ್ತಾರ, ಪದ್ಮಾವತಿ ಹುಬ್ಬಳ್ಳಿ, ಮಹಾದೇವಪ್ಪ ಹೊಂಬಾಳಿ, ಮಹಾಂತಪ್ಪ ಪಲ್ಲೇದ, ಮಂಜುನಾಥ ಮೆಣಸಿನಕಾಯಿ ಮುಂತಾದವರು ಉಪಸ್ಥಿತರಿದ್ದರು.



