ವಿಜಯಸಾಕ್ಷಿ ಸುದ್ದಿ, ಗದಗ: ದೈಹಿಕ, ಮಾನಸಿಕ, ಆಧ್ಯಾತ್ಮಿಕ, ಸಾಮಾಜಿಕ ಹಾಗೂ ನೈತಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಸಾಧನೆ ಅತ್ಯುತ್ತಮ ಮಾರ್ಗವಾಗಿದೆ ಎಂದು ನಿವೃತ್ತ ಪ್ರಾಚಾರ್ಯ, ಖ್ಯಾತ ವೈದ್ಯ ಹಾಗೂ ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಡಾ. ಉಮೇಶ ಪುರದ ಹೇಳಿದರು.
12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಎಸ್.ವೈ.ಬಿ.ಎಂ.ಎಸ್. ಯೋಗಪಾಠಶಾಲೆಯ ಬಸವ ಯೋಗ ಮಹಾವಿದ್ಯಾಲಯ, ಲಿಂಗಾಯತ ಪ್ರಗತಿಶೀಲ ಸಂಘ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಯೋಗ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿದ್ದ ಯೋಗ ಅರಿವು-ಆಚಾರ ಶಿಬಿರದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇಂದಿನ ದಿನಗಳಲ್ಲಿ ಕೇವಲ ದೈಹಿಕ ಆರೋಗ್ಯವಷ್ಟೇ ಅಲ್ಲ, ಮಾನಸಿಕ ಮತ್ತು ನೈತಿಕ ಆರೋಗ್ಯವೂ ಅತ್ಯಂತ ಅಗತ್ಯವಾಗಿದೆ. ಪತಂಜಲಿ ಪ್ರತಿಪಾದಿಸಿದ ಅಷ್ಟಾಂಗ ಯೋಗ ಹಾಗೂ ಬಸವಣ್ಣನವರ ಶಿವಯೋಗ ಸಾಧನೆಗಳು ಪರಿಪೂರ್ಣ ಆರೋಗ್ಯದತ್ತ ಕೊಂಡೊಯ್ಯುತ್ತವೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಸಮಾಜಸೇವಕಿ ಹಾಗೂ ವಕೀಲೆ ಶ್ರೀದೇವಿ ಶೆಟ್ಟರ ಮಾತನಾಡಿ, ಕುಟುಂಬ ಮತ್ತು ಸಮಾಜದ ಆರೋಗ್ಯಕರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಯೋಗಾಭ್ಯಾಸವನ್ನು ಜೀವನದ ಭಾಗವಾಗಿಸಿಕೊಂಡರೆ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಪತಂಜಲಿ ಯೋಗ ಸಮಿತಿಯ ಜಿಲ್ಲಾ ಕೋಶಾಧ್ಯಕ್ಷ ಕೆ.ಎಸ್. ಗುಗ್ಗರಿ ಮಾತನಾಡಿ, ಯೋಗ ಎಂದರೆ ಕೂಡಿಸುವ ಶಕ್ತಿ. ಕುಟುಂಬ, ಸಮಾಜ ಹಾಗೂ ರಾಷ್ಟ್ರದ ಮಟ್ಟದಲ್ಲಿ ಸಾಮರಸ್ಯ ಬೆಳೆಸುವಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎ. ಬಳಿಗೇರ ಮಾತನಾಡಿ, ಶಿವಶರಣರು ಅನುಸರಿಸಿದ ಕಾಯಕ ಯೋಗ ಇಂದಿನ ಸಮಾಜಕ್ಕೂ ಪ್ರಸ್ತುತವಾಗಿದ್ದು, ಯೋಗದೊಂದಿಗೆ ಮೌಲ್ಯಾಧಾರಿತ ಜೀವನ ನಡೆಸಿದರೆ ನೆಮ್ಮದಿ ಸಾಧ್ಯ ಎಂದು ಹೇಳಿದರು.
ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಅಧ್ಯಕ್ಷೆ ಜಯಶ್ರೀ ಉಗಲಾಟದ ಮಾತನಾಡಿ, ಮೌನ ಮತ್ತು ಆತ್ಮಾವಲೋಕನದ ಮೂಲಕ ಮನಸ್ಸಿನ ಶಾಂತಿ ಸಾಧಿಸಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಸದಸ್ಯರು, ತೋಂಟದಾರ್ಯ ಪ್ರಸಾದ ನಿಲಯದ ವಿದ್ಯಾರ್ಥಿಗಳು ಹಾಗೂ ಯೋಗಾಸಕ್ತರು ಭಾಗವಹಿಸಿದ್ದರು.
ನಿವೃತ್ತ ಮುಖ್ಯೋಪಾಧ್ಯಾಯ ಶಿವನಗೌಡ ಗೌಡರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುನಂದಾ ಜ್ಞಾನೋಪಂತ ಧ್ಯಾನಕ್ಕೆ ಪೂರಕವಾದ ಸಂಗೀತ ಸೇವೆ ನೀಡಿದರು. ಶಿವಲೀಲಾ ಅಕ್ಕಿ ವಂದಿಸಿದರು. ಬಸವ ಯೋಗ ಮಹಾವಿದ್ಯಾಲಯದ ಪ್ರಾಚಾರ್ಯ ಕೆ.ಎಸ್. ಪಲ್ಲೇದ ಕಾರ್ಯಕ್ರಮ ನಿರೂಪಿಸಿದರು.
“ಯೋಗವು ಕೇವಲ ವ್ಯಾಯಾಮವಲ್ಲ; ದೇಹ, ಮನಸ್ಸು ಮತ್ತು ಆತ್ಮವನ್ನು ಸಮತೋಲನದಲ್ಲಿ ಇಡುವ ಜೀವನ ಪದ್ಧತಿಯಾಗಿದೆ.”
— ಡಾ. ಉಮೇಶ ಪುರದ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರು



