ಜೈಪುರ:- ಹೋಳಿ ಹಬ್ಬದಂದೇ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ರಾಲ್ವಾಸ್ ಗ್ರಾಮದಲ್ಲಿ ಜರುಗಿದೆ. ಹಬ್ಬದಂದು ಬಣ್ಣ ಹಚ್ಚಿಸಿಕೊಳ್ಳಲು ನಿರಾಕರಿಸಿದ ಹಿನ್ನೆಲೆ ಈ ಕೃತ್ಯ ಎಸಗಲಾಗಿದೆ.
ಹಂಸರಾಜ್ ಕೊಲೆಯಾದ ಯುವಕ. ಹಂಸರಾಜ್ ಸ್ಥಳೀಯ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ. ಇಲ್ಲಿಗೆ ಬಂದ ಅಶೋಕ್, ಬಬ್ಲು ಮತ್ತು ಕಲುರಾಮ್ ಬಣ್ಣ ಬಳಿಯಲು ಯತ್ನಿಸಿದ್ದರು. ಈ ವೇಳೆ ಯುವಕ ನಿರಾಕರಿಸಿದ್ದಕ್ಕೆ, ಮೂವರು ಆತನಿಗೆ ಬೆಲ್ಟ್ನಿಂದ ಹಲ್ಲೆ ನಡೆಸಿದ್ದರು. ಬಳಿಕ ಅದರಲ್ಲಿ ಒಬ್ಬ ಕತ್ತು ಹಿಸುಕಿ ಆತನನ್ನು ಹತ್ಯೆಗೈದಿದ್ದಾನೆ. ಈ ಬಗ್ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಅಗರ್ವಾಲ್ ಸ್ಪಷ್ಟನೆ ಕೊಟ್ಟಿದ್ದಾರೆ.
ಹತ್ಯೆಯನ್ನು ಖಂಡಿಸಿ ಕುಟುಂಬದ ಸದಸ್ಯರು ಮತ್ತು ಗ್ರಾಮಸ್ಥರು ಹಂಸರಾಜ್ ಅವರ ಶವವನ್ನು ಈ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇರಿಸಿ ಪ್ರತಿಭಟನೆ ನಡೆಸಿದ್ದಾರೆ. ಮೃತನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ, ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಕೆಲಸ ನೀಡಬೇಕು. ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.