ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುರುಷರಕಟ್ಟೆ ಬಳಿ ಯುವತಿಗೆ ಚಾಕು ತೋರಿಸಿ ಕಿರುಕುಳ ನೀಡಲಾಗಿದೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಪೊಲೀಸರು ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಪುರುಷರಕಟ್ಟೆ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ ಎನ್ನಲಾಗಿದ್ದು, ಈ ಕುರಿತು ಯುವತಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಕೂಟಿ ನಿಲ್ಲಿಸಿ ಬಸ್ ಹತ್ತಲು ತೆರಳುತ್ತಿದ್ದ ವೇಳೆ ತನಗೆ ಪರಿಚಯವಿದ್ದ ಸುಹೈಲ್ ಹಾಗೂ ಆತನ ಜೊತೆಗಿದ್ದ ಇತರ ಮೂವರು ಯುವಕರು ಅಡ್ಡಗಟ್ಟಿ ಚಾಕು ತೋರಿಸಿ ಕಿರುಕುಳ ನೀಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.
ಯುವತಿಯ ದೂರಿನ ಆಧಾರದ ಮೇಲೆ ಪುತ್ತೂರು ಮಹಿಳಾ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 78(1) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಪ್ರಕರಣದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿತ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಯುವಕರಿಂದ ಪ್ರತಿದೂರು:
ಈ ನಡುವೆ ಆರೋಪಿತ ಯುವಕರು ಕೂಡ ಪೊಲೀಸರಿಗೆ ಪ್ರತ್ಯೇಕ ದೂರು ನೀಡಿದ್ದಾರೆ. ತಾವು ಯಾವುದೇ ಕಿರುಕುಳ ಅಥವಾ ಬೆದರಿಕೆ ನೀಡಿಲ್ಲ ಎಂದು ಹೇಳಿರುವ ಅವರು, ಬೇಕರಿಯಲ್ಲಿ ಬ್ರೆಡ್ಗೆ ಚೀಸ್ ಹಾಕಲು ಚಾಕು ಪಡೆದುಕೊಂಡಿದ್ದೆವು. ಚೀಸ್ ಕತ್ತರಿಸಿದ ಬಳಿಕ ಅದನ್ನು ವಾಪಸ್ ನೀಡಲು ತೆರಳುತ್ತಿದ್ದಾಗ ಯುವತಿ ಎದುರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ಯುವಕರು ಆರೋಪಿಸಿದ್ದಾರೆ. ಈ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಸಿಸಿಟಿವಿ ದೃಶ್ಯಗಳ ಪರಿಶೀಲನೆ:
ಸದ್ಯ ಪೊಲೀಸರು ಪುರುಷರಕಟ್ಟೆ ಜಂಕ್ಷನ್ ಹಾಗೂ ಬೇಕರಿ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಯುವತಿ ಮಾಡಿರುವ ಆರೋಪ ಮತ್ತು ಯುವಕರು ನೀಡಿರುವ ಪ್ರತಿದೂರಿನ ಸತ್ಯಾಸತ್ಯತೆ ಪತ್ತೆಹಚ್ಚಲು ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.



