ವಿಜಯಸಾಕ್ಷಿ ಸುದ್ದಿ, ಗದಗ: ಆಕರ್ಷಕ ಪ್ಯಾಕಿಂಗ್, ಬಣ್ಣ, ಸುವಾಸನೆ ಮತ್ತು ಡಿಜಿಟಲ್ ಪ್ರಚಾರದ ಮೂಲಕ ಯುವಜನರನ್ನು ತಂಬಾಕು ವ್ಯಸನದ ಬಲೆಗೆ ಸೆಳೆಯುತ್ತಿರುವ ಕುರಿತು ಗದಗದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದಲ್ಲಿ ಗಂಭೀರ ಕಳವಳ ವ್ಯಕ್ತವಾಯಿತು.
“ಆಕರ್ಷಣೆಯನ್ನು ಬಹಿರಂಗಪಡಿಸುವುದು – ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದುರಿಸುವುದು” ಎಂಬ ಘೋಷವಾಕ್ಯದೊಂದಿಗೆ ಜೂನ್ 3ರಂದು ಜಿಲ್ಲಾ ಎಸ್.ವಿ.ಟಿ ಪ್ಯಾರ್ ಮೆಡಿಕಲ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಜಿಲ್ಲಾ ಎನ್ಸಿಡಿ ಘಟಕ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶ ಸಿ.ಎಸ್. ಶಿವನಗೌಡ್ರ, ತಂಬಾಕು ವ್ಯಸನದಿಂದ ಉಂಟಾಗುವ ರೋಗಗಳು ಹಾಗೂ ಸಾವುಗಳನ್ನು ನಿಯಂತ್ರಿಸಲು ನಿರಂತರ ಜಾಗೃತಿ ಕಾರ್ಯಕ್ರಮಗಳು ಅತ್ಯಗತ್ಯ ಎಂದು ಹೇಳಿದರು.
ಶಾಲೆ ಹಾಗೂ ಕಾಲೇಜುಗಳಲ್ಲಿ ತಂಬಾಕು ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಮೂಲಕವೇ ತಂಬಾಕು ಮುಕ್ತ ಯುವ ಪೀಳಿಗೆ ನಿರ್ಮಾಣ ಸಾಧ್ಯ ಎಂದು ತಿಳಿಸಿದರು. ಜೊತೆಗೆ ತಂಬಾಕು ನಿಯಂತ್ರಣ ಕಾಯ್ದೆ (ಕೋಟ್ಪಾ-2003) ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಬೇಕೆಂದು ಅಭಿಪ್ರಾಯಪಟ್ಟರು.
ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೀತ್ ಖೋನಾ ಮಾತನಾಡಿ, ತಂಬಾಕು ಉತ್ಪನ್ನಗಳನ್ನು ವಿವಿಧ ಬಣ್ಣ, ಫ್ಲೇವರ್, ಸುವಾಸನೆ ಹಾಗೂ ಡಿಜಿಟಲ್ ಮಾರ್ಕೆಟಿಂಗ್ ಮೂಲಕ ಯುವಜನರನ್ನು ಸೆಳೆಯುವ ರೀತಿಯಲ್ಲಿ ಮಾರುಕಟ್ಟೆಗೆ ತರಲಾಗುತ್ತಿದೆ ಎಂದು ಹೇಳಿದರು.
ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು ಸೇರಿದಂತೆ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ ಎಂದು ಅವರು ಎಚ್ಚರಿಸಿದರು.
ಜಿಲ್ಲಾ ಆಸ್ಪತ್ರೆಯ ರೂಂ ನಂ.189ರಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿ ಉಚಿತ ಆಪ್ತ ಸಮಾಲೋಚನೆ ಹಾಗೂ ಔಷಧೋಪಚಾರ ಸೇವೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಎಸ್.ವಿ.ಟಿ ಪ್ಯಾರ್ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ವಿನಯ ಕುಬಸದ್ ಮಾತನಾಡಿ, ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಅತ್ಯಂತ ಅಗತ್ಯವಾಗಿದ್ದು, ವಿದ್ಯಾರ್ಥಿಗಳು ಈ ಮಾಹಿತಿಯನ್ನು ಕುಟುಂಬ ಹಾಗೂ ಸಮಾಜಕ್ಕೆ ತಲುಪಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ್ ಚವ್ಹಾಣ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಗೋಪಾಲ ಸುರಪುರ, ಬಸಮ್ಮ ಚಿತ್ತರಗಿ, ರೇಷ್ಮಾ ಎನ್. ನದಾಫ್, ಪಂಪಾಮತಿ, ವಿರೇಶ ಮದಕಟ್ಟಿ, ಶಿವಕುಮಾರ ಬಗಾಡೆ ಹಾಗೂ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಎಂ. ರಬ್ಬನಗೌಡ ನಿರೂಪಿಸಿದರು.
ಶಾಲೆ ಸುತ್ತ ತಂಬಾಕು ಮಾರಾಟ ಕಂಡರೆ 112ಕ್ಕೆ ಕರೆ
ಉಪ ಪೊಲೀಸ್ ವರಿಷ್ಠಾಧಿಕಾರಿ ಎಂ.ಐ. ಸಜ್ಜನವರ ಮಾತನಾಡಿ, ಶಾಲೆಗಳ ಸುತ್ತಮುತ್ತ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಕಂಡುಬಂದಲ್ಲಿ ಅಥವಾ ಕೋಟ್ಪಾ ಕಾಯ್ದೆ ಉಲ್ಲಂಘನೆಯಾದಲ್ಲಿ 112ಕ್ಕೆ ಕರೆ ಮಾಡಿದರೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಡ್ರಗ್ ಫ್ರೀ ಆ್ಯಪ್ ಮೂಲಕ ಕಾನೂನುಬಾಹಿರ ಮಾದಕ ವಸ್ತುಗಳ ಬಳಕೆ, ಸಂಗ್ರಹಣೆ ಹಾಗೂ ಉತ್ಪಾದನೆ ಕುರಿತು ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಹೇಳಿದರು.
“ನಿಕೋಟಿನ್ ದೇಹದ ಪ್ರತಿಯೊಂದು ಅಂಗದ ಮೇಲೂ ದುಷ್ಪರಿಣಾಮ ಬೀರುತ್ತದೆ; ತಂಬಾಕು ಕ್ಯಾನ್ಸರ್ ಸೇರಿದಂತೆ ಮಾರಕ ರೋಗಗಳಿಗೆ ಕಾರಣ”
ಡಾ. ಪ್ರೀತ್ ಖೋನಾ, ತಾಲೂಕು ಆರೋಗ್ಯಾಧಿಕಾರಿ
“ತಂಬಾಕು ವ್ಯಸನದ ವಿರುದ್ಧ ಜಾಗೃತಿ ಮೂಡಿಸದಿದ್ದರೆ ಮುಂದಿನ ಪೀಳಿಗೆಯ ಆರೋಗ್ಯವೇ ಅಪಾಯಕ್ಕೆ ಸಿಲುಕಲಿದೆ”
ಸಿ.ಎಸ್. ಶಿವನಗೌಡ್ರ, ಹಿರಿಯ ದಿವಾಣಿ ನ್ಯಾಯಾಧೀಶರು



