ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಕೆಎಸ್ಆರ್ ಟಿಸಿ ಎನ್ನುವ ಟ್ರೇಡ್ ಮಾರ್ಕ್ ಅನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬಳಸುವಂತಿಲ್ಲ ಎಂದು ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿ ಬುಧವಾರ ತನ್ನ ಅಂತಿಮ ತೀರ್ಪ ಪ್ರಕಟಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಇದು ಸತ್ಯಕ್ಕೆ ದೂರವಾದ ವರದಿ. ಏಕೆಂದರೆ ಇಲ್ಲಿಯವರೆಗೂ ನಮ್ಮ ಸಾರಿಗೆ ಸಂಸ್ಥೆ, ಕೇಂದ್ರ ಟ್ರೇಡ್ ಮಾರ್ಕ್ ರಿಜಿಸ್ಟರಿ ಯಾವುದೇ ಸೂಚನೆ ಅಥವಾ ಆದೇಶ ಬಂದಿಲ್ಲ ಎಂದು ವ್ಯವಸ್ಥಾಪಕ ನಿರ್ದೇಶಕರು ಶಿವಯೋಗಿ ಸಿ.ಕಳಸದ ಸ್ಪಷ್ಟೀಕರಣ ನೀಡಿದ್ದಾರೆ.
ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ‘ಕೆಎಸ್ಆರ್ ಟಿಸಿ ಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣ ಪತ್ರದ ವಿರುದ್ಧ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲ.
ಈ ಮಂಡಳಿಯನ್ನು 4.04.2021 ರ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ. ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕೆಎಸ್ಆರ್ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಹಾಗೂ ಕೆಎಸ್ಆರ್ ಟಿಸಿಯು ತನಗೆ ನೀಡಲಾಗಿರುವ ಟ್ರೇಡ್ ಮಾರ್ಕ್ ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿವೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು ಎಂದಿದ್ದಾರೆ.
ಕೇರಳ ಎಸ್ ಆರ್ ಟಿಸಿಯು, ಕೆಎಸ್ ಆರ್ ಟಿಸಿ ಸಂಸ್ಥೆ ಗೆ ನೊಟೀಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರ ನೀಡಲಾಗುತ್ತದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ವಕೀಲರನ್ನು ಸಂಪರ್ಕಿಸುತ್ತಿದ್ದೇವೆ. ಹೀಗಾಗಿ ಮಾಧ್ಯಮಗಳು ಕಾನೂನಾತ್ಮಕವಲ್ಲದ ಇಂತಹ ವರದಿಗಳನ್ನು ಪ್ರಕಟಿಸದಂತೆ ವಿನಂತಿಸಿದ್ದಾರೆ.