ವಿಜಯಸಾಕ್ಷಿ ಸುದ್ದಿ, ಗದಗ
ಕೊರೋನಾ ಸೋಂಕಿನ ಎರಡನೇ ಅಲೆ ತಡೆಗಟ್ಟಲು ಜಿಲ್ಲಾಡಳಿತ ಜಿಲ್ಲೆಯಲ್ಲಿ ಜಾತ್ರೆ, ಉರುಸ್, ಮೆರವಣಿಗೆ, ರಾಜಕೀಯ ಸಭೆ, ಸಮಾರಂಭ ಸೇರಿದಂತೆ ಜನ ಗುಂಪಾಗಿ ಕೂಡದಂತೆ ನಿಷೇದಾಜ್ಞೆ ವಿಧಿಸಿದೆ.
ಆದರೆ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ಕಾಲಕಾಲೇಶ್ವರ ಗ್ರಾಮದ ಖ್ಯಾತ ಕಾಲಕಾಲೇಶ್ವರ ಜಾತ್ರೆ ಸಾಂಗವಾಗಿ ನಡೆದಿದೆ. ಮಂಗಳವಾರ ನಸುಕಿನಲ್ಲಿ ನೂರಾರು ಭಕ್ತರು ರಥೋತ್ಸವ ನಡೆಸಿದ ಆರೋಪ ಕೇಳಿ ಬಂದಿದೆ. ಅದೂ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ತೇರು ಎಳೆದಿದ್ದಾರೆ ಎನ್ನಲಾಗಿದೆ. ಈ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.

ನೂರಾರು ಜನರು ಸರಕಾರದ ಆದೇಶ ಉಲ್ಲಂಘಿಸಿ ತೇರು ಎಳೆದ ಪೋಟೋಗಳು ಈಗ ವೈರಲ್ ಆಗಿವೆ.

ಇದೇ ರೀತಿ ಲಕ್ಷ್ಮೇಶ್ವರ ತಾಲೂಕಿನ ಪುಟಗಾಂವ ಬಡ್ನಿ ಗ್ರಾಮದಲ್ಲಿ ಮಾರುತಿ ದೇವರ ರಥೋತ್ಸವ ನಡೆಸಿದ ಆರೋಪದ ಮೇಲೆ ಗ್ರಾಮದ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಹದಿಮೂರು ಜನರ ವಿರುದ್ಧ ಲಕ್ಷ್ಮೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದನ್ನು ಸ್ಮರಿಸಬಹುದು.