ಕೋವಿಡ್ ನಿಯಮ ಉಲ್ಲಂಘನೆ ಬೇಡ
ವಿಜಯಸಾಕ್ಷಿ ಸುದ್ದಿ, ಗದಗ
ಮದುವೆ ಸಮಾರಂಭಗಳಿಗೆ ಸರ್ಕಾರ ನಿಗದಿಪಡಿಸಿದ ಸಂಖ್ಯೆಗಿಂತ ಅಧಿಕ ಜನ ಸೇರಿದರೆ ವಧು-ವರ, ಪಾಲಕರು ಮತ್ತು ಕಲ್ಯಾಣ ಮಂಟಪಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಹಸೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಹೇಳಿದರು.
ಗದಗ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಜರುಗಿದ ತಾಲೂಕಿನ ಕಲ್ಯಾಣ ಮಂಟಪ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮದುವೆ ಸಮಾರಂಭಗಳಿಗೆ ಪೂರ್ವಾನುಮತಿ ಪಡೆದು ನಿಯಮಾನುಸಾರ ಅವಕಾಶವಿರುವಂತೆ ತೆರೆದ ಪ್ರದೇಶಗಳಲ್ಲಿ 200 ಜನ ಹಾಗೂ ಸಭಾಂಗಣ ಅಥವಾ ಒಳಾಂಗಣಗಳಲ್ಲಿ 100 ಜನರಿಗೆ ಮೀರದಂತೆ ಮಾತ್ರ ಜನರು ಭಾಗವಹಿಸಬಹುದು. ಕೋವಿಡ್ 2ನೇ ಅಲೆಯ ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸಿರುವ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು. ಜಾತ್ರೆ, ಧಾರ್ಮಿಕ ಆಚರಣೆಗಳಿಗೆ ಅವಕಾಶವಿಲ್ಲ ಎಂದರು.

ಸರ್ಕಾರದ ಮಾರ್ಗಸೂಚಿಗಳನ್ನು ಪ್ರಚುರಪಡಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ನಿಯಮ ಪಾಲಿಸದವರಿಗೆ ದಂಡ ವಿಧಿಸುವ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಇದೆಲ್ಲಕ್ಕಿಂತ ಮುಖ್ಯ ಸಾರ್ವಜನಿಕರು ಕೋವಿಡ್ ಸಾಂಕ್ರಾಮಿಕ ರೋಗದ ಗಂಭೀರತೆಯನ್ನು ಅರ್ಥ ಮಾಡಿಕೊಂಡು ಸರ್ಕಾರ ನೀಡಿರುವ ಆರೋಗ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಸೋಂಕು ನಿಯಂತ್ರಣ ಮಾಡುವಲ್ಲಿ ಸಹಕಾರ ನೀಡಬೇಕು.
ಕೋವಿಡ್ ಸೋಂಕಿನ 2ನೇ ಅಲೆಯು ಹೆಚ್ಚು ಬೇಗವಾಗಿ ಒಬ್ಬರಿಂದ ಇನ್ನೊಬ್ಬರಿಗೆ ತಗಲುತ್ತಿದೆ. ಸಾರ್ವಜನಿಕರು ಉದಾಸೀನತೆ ಹಾಗೂ ನಿರ್ಲಕ್ಷ್ಯ ತೋರದೇ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಮತ್ತು ಕನಿಷ್ಠ ಸಾಮಾಜಿಕ ಅಂತರ ಕಾಪಾಡಬೇಕು. ಆಗಾಗ ಸೋಪು, ಸ್ಯಾನಿಟೈಸರ್ನಿಂದ ಕೈಗಳನ್ನು ತೊಳೆಯಬೇಕು. ಇವುಗಳ ಪಾಲನೆಯಿಂದ ಮಾತ್ರ ತಮ್ಮ ಹಾಗೂ ಕುಟುಂಬದ ಆರೋಗ್ಯವನ್ನು ಕಾಪಾಡಬಹುದಾಗಿದೆ. ಅಲ್ಲದೇ ಕೋವಿಡ್ ವೈರಸ್ನಿಂದ ಸುರಕ್ಷಿತವಾಗಿ ಇದ್ದು, ಜೀವಹಾನಿ ತಡೆಯಬಹುದಾಗಿದೆ ಎಂದು ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ತಿಳಿಸಿದರು.
ಶಹರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ (ಸಿ.ಪಿ.ಐ) ಪಿ.ವಿ. ಸಾಲಿಮಠ ಮಾತನಾಡಿ, ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ರಾಜ್ಯ ಸರ್ಕಾರವು ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಹೊರಡಿಸಿರುವ ಆದೇಶಕ್ಕನುಗುಣವಾಗಿ ಮಾತ್ರ ಸಾಮಾಜಿಕ ಆಚರಣೆಗಳು, ಸಮಾರಂಭಗಳು, ಮದುವೆ, ಇತರೆ ಸಮಾರಂಭ ಏರ್ಪಡಿಸಲು ಷರತ್ತು ಬದ್ಧ ಅವಕಾಶವಿದೆ. ನಿಯಮಗಳನ್ನು ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿಕೊಂಡು, ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51 ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಮತ್ತು ಅನ್ವಯವಾಗಬಹುದಾದ ಇತರ ಕಾನೂನು ಪ್ರಕಾರ ಕ್ರಮ ವಹಿಸಲಾಗುವುದು. ಜನತೆ ಈ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದರು.
ಸಭೆಯಲ್ಲಿ ತಾಲೂಕಿನ ಇಲಾಖೆ ಅಧಿಕಾರಿಗಳು, ಪೊಲೀಸ ಇಲಾಖೆಯ ಗ್ರಾಮೀಣ ಠಾಣೆ ಹಾಗೂ ಬೆಟಗೇರಿ ಠಾಣೆಯ ವೃತ್ತ ನಿರೀಕ್ಷಕರು, ಕಲ್ಯಾಣ ಮಂಟಪದ ಮಾಲೀಕರು, ವ್ಯವಸ್ಥಾಪಕರು ಹಾಜರಿದ್ದರು.