ವಿಜಯಸಾಕ್ಷಿ ಸುದ್ದಿ, ಗದಗ:
ಗದಗ ಬೆಟಗೇರಿ ಅವಳಿ ನಗರದಲ್ಲಿನ ಮೂತ್ರಾಲಯಗಳ ಸಮಸ್ಯೆ ನಿವಾರಿಸಲು ವಿಫಲವಾಗಿರುವ ಗದಗ ನಗರಸಭೆಯ ಕ್ರಮ ಖಂಡಿಸಿ ಶ್ರೀರಾಮಸೇನೆಯ ಕಾರ್ಯಕರ್ತರು ಮಂಗಳವಾರ (ನ. ೨೩) ನಗರಸಭೆ ಪೌರಾಯುಕ್ತರ ಕಚೇರಿಯಲ್ಲಿ ಮೂತ್ರ ವಿಸರ್ಜನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಿದ್ದಾರೆ.

ಈ ಬಗ್ಗೆ ಪ್ರತಿಕಾ ಪ್ರಕಟಣೆ ನೀಡಿರುವ ಅವರು, ‘ಗದಗ ನಗರಸಭೆ ಅಧಿಕಾರಿಗಳು ಎರಡು ವರ್ಷಗಳ ಹಿಂದೆ ಅವಳಿ ನಗರದ ಎಲ್ಲ ಮೂತ್ರಾಲಯಗಳನ್ನು ಕೆಡವಿ ಹಾಕಿದ್ದಾರೆ. ಈ ಮೂತ್ರಾಲಯಗಳನ್ನು ಪುನರ್ ನಿರ್ಮಾಣ ಮಾಡುವುದಾಗಿ ನಗರಸಭೆ ಅಧಿಕಾರಿಗಳು ಹೇಳುತ್ತಾ ಕಾಲಕ್ಷೇಪ ಮಾಡುತ್ತಿದ್ದಾರೆ. ಅಧಿಕಾರಿಗಳ ದುರ್ವರ್ತನೆಯಿಂದ ಅವಳಿ ನಗರದ ನಾಗರಿಕರು ತೀವ್ರವಾಗಿ ಪರಿತಪಿಸುತ್ತಿದ್ದಾರೆ.
ಮಂಗಳವಾರ ಬೆಳಗ್ಗೆ 10.30ಕ್ಕೆ ಶ್ರೀರಾಮಸೇನೆಯ ಕಾರ್ಯಕರ್ತರು ಸಾರ್ವಜನಿಕರೊಂದಿಗೆ ಗದಗ ನಗರಸಭೆಯ ಪೌರಾಯುಕ್ತರ ಕಚೇರಿಯಲ್ಲಿ ಮೂತ್ರ ವಿಸರ್ಜನೆ ಮಾಡಲಿದ್ದಾರೆ ಎಂದು ಶ್ರೀರಾಮಸೇನೆಯ ಧಾರವಾಡ ವಿಭಾಗೀಯ ಸಂಚಾಲಕ ರಾಜೂ ಖಾನಪ್ಪನವರ ತಿಳಿಸಿದ್ದಾರೆ.